ಸೆ.9ಕ್ಕೆ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ – ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ

Public TV
2 Min Read

ಚಂಡೀಗಢ: ಸೆ.9ಕ್ಕೆ ಪ್ರಧಾನಿ ಮೋದಿ (PM Modi) ಪ್ರವಾಹ ಪೀಡಿತ ಪಂಜಾಬ್‌ಗೆ (Punjab) ಭೇಟಿ ನೀಡಲಿದ್ದು, ಈ ವೇಳೆ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್ ಸೇರಿದಂತೆ ಇತರ ಪ್ರದೇಶಗಳು ತೀವ್ರ ಹಾನಿಗೊಳಗಾಗಿವೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಗುರುದಾಸ್ಪುರಕ್ಕೆ (Gurudaspur) ಭೇಟಿ ನೀಡುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಅಪಾಯಮಟ್ಟ ಮೀರಿದ ಯಮುನೆ – ಹಲವು ಪ್ರದೇಶಗಳು ಜಲಾವೃತ

ಈ ಕುರಿತು ರಾಜ್ಯ ಬಿಜೆಪಿ (BJP Punjab) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗುರುದಾಸ್ಪುರ ಭೇಟಿ ವೇಳೆ ಮೋದಿಯವರು ಪ್ರವಾಹ ಪೀಡಿತರನ್ನು ನೇರವಾಗಿ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜೊತೆಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಿದ್ದಾರೆ. ಈ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಯಾವಾಗಲೂ ಪಂಜಾಬ್ ಜನರೊಂದಿಗಿದೆ ಹಾಗೂ ಕಷ್ಟದಲ್ಲಿ ಸಹಾಯ ಮಾಡುತ್ತದೆಂದು ಸಾಬೀತುಪಡಿಸುತ್ತದೆ ಎಂದು ಬರೆದುಕೊಂಡಿದೆ.

ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ಪಂಜಾಬ್ ರಾಜ್ಯಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹವು ಪಂಜಾಬ್‌ನ 14 ಜಿಲ್ಲೆಗಳಲ್ಲಿ ತೀವ್ರಹಾನಿಯನ್ನುಂಟು ಮಾಡಿದೆ. ಈವರೆಗೂ 46 ಜನರು ಸಾವನ್ನಪ್ಪಿದ್ದು, ಸುಮಾರು 2,000 ಗ್ರಾಮಗಳು ಮುಳುಗಡೆಯಾಗಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ ರಾಜ್ಯದಲ್ಲಿ ನಿರಂತರ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.ಇದನ್ನೂ ಓದಿ: ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Share This Article