ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ (Sabarimala Ayyappan Temple) ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ.
ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದಾರೆ. 2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೈಕೋರ್ಟ್ (High Court) ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ ವಿ ಮತ್ತು ಕೆ.ವಿ. ಜಯಕುಮಾರ್ ಅವರ ವಿಭಾಗೀಯ ಪೀಠವು ತುರ್ತು ಮತ್ತು ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದೆ.
