ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಹೆದ್ದಾರಿ ಕುಸಿತ, ಹೇರಿಕುದ್ರುವಿನಲ್ಲಿ ಮನೆಗಳಿಗೆ ನುಗ್ಗಿದ ನೀರು

Public TV
1 Min Read

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹೆದ್ದಾರಿ ಅಲ್ಲಲ್ಲಿ ಕುಸಿದು ಹೋಗಿದೆ. ಕರಾವಳಿ ಬೈಪಾಸ್ ಬಳಿ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ವಾಹನ ಸವಾರರು ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ರಸ್ತೆ ಪಕ್ಕದ ಡ್ರೈನೇಜ್ ಕೆಟ್ಟು ಹೋಗಿದ್ದು ನೀರೆಲ್ಲಾ ರಸ್ತೆ ಮೇಲೆ ಹರಿಯುತ್ತಿದೆ.

ಅತ್ತ ಕುಂದಾಪುರದ ಹೇರಿಕುದ್ರು ಎಂಬಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಈ ಪ್ರದೇಶದ ಸುಮಾರು 50 ಮನೆಗಳಿಗೆ ಕೆಸರು ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಉಡುಪಿ- ಕುಂದಾಪುರ- ಕಾರವಾರ ಸಂಪರ್ಕಿಸುವ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ವ್ಯವಸ್ಥೆಯಿಲ್ಲದೆ ಮಳೆಯ ನೀರು ಮನೆಗಳತ್ತ ಹರಿಯುತ್ತಿದೆ. ಮೊಣಕಾಲು ಮುಳುಗುವಷ್ಟು ನೀರು ಮನೆಗಳತ್ತ ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ, ಪಡುಬಿದ್ರೆ, ಹೆಬ್ರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಮೋಡ ಮುಸುಕಿದ ವಾತಾವರಣವಿದ್ದು ಇಂದು ದಿನಪೂರ್ತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇದೇ ರೀತಿ ಮಳೆ ಮುಂದುವರೆದರೆ ನದಿಗಳು ತುಂಬುವ ಸಾಧ್ಯತೆಯಿದೆ. ಮಳೆಯ ಜೊತೆ ಗಾಳಿಯೂ ಬೀಸುತ್ತಿದ್ದು ಉಡುಪಿ ನಗರದಲ್ಲೇ ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹೀಗಾಗಿ ವಿದ್ಯುತ್ ವ್ಯತ್ಯಯವಾಗಿದೆ. ಕಟಪಾಡಿ, ಮಟ್ಟು ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗಿದೆ.

ಕುಂದಾಪುರ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು ಸಂಚಾರಕ್ಕೆ ವ್ಯತ್ಯಯವಾಗಿದೆ. ವಾಹನ ಸವಾರರು ಮತ್ತು ಪಾದಾಚಾರಿಗಳಿಗೆ ಮಳೆ ಸ್ವಲ್ಪ ಕಿರಿಕಿರಿ ಕೊಡುತ್ತಿದೆ. ವಾತಾವರಣ ಪೂರ್ಣ ತಂಪಾಗಿದೆ. ಹಳ್ಳಿ ಪ್ರದೇಶದಲ್ಲಿ ಮಂಜು ಮುಸುಕಿದ ವಾತಾವರಣವಿದೆ.

 

Share This Article
Leave a Comment

Leave a Reply

Your email address will not be published. Required fields are marked *