CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

4 Min Read

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆ ಸಿದ್ಧತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿದ್ಧತೆ ಮಾಡಿಕೊಂಡಿದೆ.

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.ಇದನ್ನೂ ಓದಿ: CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ಹುಡುಗರು 1,44,380, ಹುಡುಗಿಯರು 1,86,099 ಹಾಗೂ ವಿಶೇಷ ಚೇತನರು 970 ಸೇರಿದಂತೆ ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಒಟ್ಟು 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಉಪ ಮುಖ್ಯ ಅಧೀಕ್ಷರು 745, ವಸ್ತ್ರ ಸಂಹಿತಾಧಿಕಾರಿ, 745, ಪರೀಕ್ಷಾ ಕೇಂದ್ರದ ಸಿಬ್ಬಂದಿ 12,665, ಕೊಠಡಿ ಮೇಲ್ವಿಚಾರಕರು 13,770, ಫ್ರಿಸ್ಕಿಂಗ್ ದಳ 3,304, ಮುಖ ಚಹರೆ ದಳ 3,304 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು 15,265 ಸಿಸಿಟಿವಿ ಕ್ಯಾಮರಾ ಇರಲಿವೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಏ.23ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.24ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 745 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ.

ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರ ಕಮಾಂಡ್ ಸೆಂಟರ್ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಒಟ್ಟು 970 ವಿಶೇಷ ಚೇತನ ಮಕ್ಕಳು ಸಿಇಟಿ ಬರೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶ್ರವಣ ಸಾಧನ ಬಳಸಿಕೊಂಡು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿರುವ ಕಾರಣ ಅಂತಹವರು ಎರಡು ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಬರಬೇಕು. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಕೂಡ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇದನ್ನೂ ಓದಿ: ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡುವ ಕಾರಣಕ್ಕೆ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ಅವರು ಪರೀಕ್ಷಾ ಕೇಂದ್ರಕ್ಕೆ ಹೋಗಬೇಕು. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ. ಯಾರದ್ದೊ ಪರೀಕ್ಷೆಯನ್ನು ಇನ್ಯಾರೊ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಿದ್ದು, ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ ಮಾಡಿದ್ದು, ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಯಾವುದೇ ಮೋಸ ಆಗಲು ಬಿಡುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದು, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದು ಎಂದು ಕೆಇಎ ಅಭಯ ನೀಡಿದೆ.

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಅಥವಾ ಅನುತ್ತೀರ್ಣರಾಗಿರುವವರಿಗೆ ಇನ್ನೂ ಫಲಿತಾಂಶವನ್ನು ಉತ್ತಮ ಮಾಡಿಕೊಳ್ಳಲು ಅವಕಾಶ ಇರುವ ಕಾರಣ ಯಾರೂ ಸಿಇಟಿ ಬರೆಯುವುದನ್ನು ತಪ್ಪಿಸಿಕೊಳ್ಳಬಾರದು. ಹೀಗಾಗಿ ಯಾರೆಲ್ಲ ಶುಲ್ಕ ಪಾವತಿಸಿದ್ದೀರೊ ಅವರೆಲ್ಲರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯಬೇಕು. ಎರಡನೇ ಪರೀಕ್ಷೆಯ ಅಂಕಗಳನ್ನು ಕೂಡ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ವಸ್ತ್ರಸಂಹಿತೆ ವಿಚಾರವಾಗಿ ಅನಗತ್ಯ ಗೊಂದಲ ತಪ್ಪಿಸಲು ಇದೇ ಮೊದಲ ಬಾರಿಗೆ ಪ್ರತಿ ಕೇಂದ್ರಕ್ಕೆ ಒಬ್ಬ ವಸ್ತ್ರ ಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ.

ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇರುವುದಿಲ್ಲ. ಶೂ ಕೂಡ ನಿಷೇಧಿಸಲಾಗಿದೆ. ಮೊಬೈಲ್, ಬ್ಲೂಟೂತ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಒಮ್ಮೆ ಕೆಇಎ ವೆಬ್‌ಸೈಟ್‌ನಲ್ಲಿ ಇರುವ ವಸ್ತ್ರಸಂಹಿತೆಯ ವಿವರಗಳನ್ನು ಓದಿಕೊಂಡು, ಆ ಪ್ರಕಾರ ಪರೀಕ್ಷೆಗೆ ಬರಬೇಕು. ಓಎಂಆರ್ ಶೀಟ್‌ನಲ್ಲಿ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಯಾವುದೇ ತಪ್ಪಿಲ್ಲದೆ ದಾಖಲಿಸಬೇಕು. ಅಭ್ಯರ್ಥಿಯ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ, ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು. ಈ ಹಿಂದೆ ಈ ಮಾಹಿತಿ ಕೂಡ ಸರಿಯಾಗಿ ಭರ್ತಿ ಮಾಡದಿರುವ ಕಾರಣ ಫಲಿತಾಂಶ ಪ್ರಕಟಣೆಗೂ ಸಮಸ್ಯೆ ಆಗಿತ್ತು. ಹೀಗಾಗಿ ಅಭ್ಯರ್ಥಿಗಳು ಎಚ್ಚರವಹಿಸಬೇಕು.

ಅಭ್ಯಾಸ ಮಾಡಲಿ ಎನ್ನುವ ಕಾರಣಕ್ಕೆ ಕರಡು ಓಎಂಆರ್ ಸೀಟ್ ಕೂಡ ಪ್ರವೇಶ ಪತ್ರದ ಜೊತೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದ್ದು, ಅದನ್ನು ಅಭ್ಯಾಸ ಮಾಡುವುದರ ಮೂಲಕ ಅನಗತ್ಯ ತಪ್ಪುಗಳನ್ನು ತಡೆಯಬೇಕು ಅಂತ ಕೆಇಎ ತಿಳಿಸಿದೆ.ಇದನ್ನೂ ಓದಿ: ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Share This Article