ಕಾವೇರಿ ನೀರು ಹಂಚಿಕೆ – ಮೇ 3ರ ಒಳಗಡೆ ಸ್ಕೀಂ ರಚಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

Public TV
2 Min Read

ನವದೆಹಲಿ: ಮತ್ತೆ ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಕೇಂದ್ರದ ಅಂಗಳಕ್ಕೆ ತಲುಪಿದೆ. ನಾವು ತೀರ್ಪಿನಲ್ಲಿ ಉಲ್ಲೇಖಿಸಿರುವ ಸ್ಕೀಂ ಅನ್ನು ಕೂಡಲೇ ರಚನೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.

ನಿರ್ವಹಣಾ ಮಂಡಳಿ ರಚನೆಯ ಕುರಿತು ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನಾ ಅರ್ಜಿ ಜತೆಗೆ ಕೇಂದ್ರದ ಸ್ಪಷ್ಟನಾ ಅರ್ಜಿಯನ್ನು ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಯಿತು.

ಈ ವೇಳೆ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ನ್ಯಾಯಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸಿತು. ಅಲ್ಲದೇ ಸ್ಕೀಂ ರಚನೆ ವಿಚಾರವಾಗಿ ಕೇಂದ್ರ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಕಾವೇರಿ ನೀರಿನ ಹಂಚಿಕೆ ಕುರಿತು ವಿಚಾರದಲ್ಲಿ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿಲ್ಲ. ಈಗಾಗಲೇ ಈ ಕುರಿತು ಕ್ರಮಕೈಗೊಳ್ಳಲಾಗಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಮೇ 3 ರ ಒಳಗೆ ಸ್ಕೀಂ ರಚನೆ ಕುರಿತು ಕೇಂದ್ರ ಸರ್ಕಾರ ಕರಡು ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸಬೇಕು. ಸುಪ್ರೀಂ ಕೋರ್ಟ್ ಕರಡು ಪ್ರತಿ ಪರಿಶೀಲನೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದೆ.

ಇದೇ ವೇಳೆ ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಧಿಕರಣ ತೀರ್ಪು ವಿಲೀನಗೊಳಿಸಿ ಆದೇಶ ನೀಡಿದ್ದು, ಪದೇ ಪದೇ ನ್ಯಾಯಧಿಕರಣ ಆದೇಶ ಉಲ್ಲೇಖಿಸುವಂತಿಲ್ಲ ಎಂದು ಸೂಚನೆ ನೀಡಿದೆ. ನೀರು ಹಂಚಿಕೆ ಮಾಡಿ ನಾವು ಆದೇಶ ನೀಡಿದ್ದೇವೆ. ಹಂಚಿಕೆ ಕಾರ್ಯರೂಪಕ್ಕೆ ಬರಲು ಕೇಂದ್ರ ಸರ್ಕಾರ ಸ್ಕೀಂ ರಚನೆ ಮಾಡಲಿದೆ. ಕೇಂದ್ರ ರಚಿಸುವ ಸ್ಕೀಂಗೆ ಎಲ್ಲ ರಾಜ್ಯಗಳು ಬದ್ಧವಾಗಿರಬೇಕು ಎಂದು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿತು.

ಅರ್ಜಿ ವಿಚಾರಣೆ ವೇಳೆ ಕಾವೇರಿ ನಿರ್ವಹಣಾ ಮಂಡಳಿ ವಿಚಾರವನ್ನು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಲಿಲ್ಲ. ತೀರ್ಪು ಪಾಲನೆಗೆ ಯೋಜನೆ ಅವಶ್ಯಕತೆ ಇದ್ದು ಆ ನಿಟ್ಟಿನಲ್ಲಿ ಸ್ಕೀಂ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಈ ಮೂಲಕ ತಮಿಳುನಾಡಿನ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆ ಹೋರಾಟಕ್ಕೆ ಸುಪ್ರೀಂ ಕೋರ್ಟ್  ಪರೋಕ್ಷ ಚಾಟಿ ಬೀಸಿತು. ಎಲ್ಲ ರಾಜ್ಯಗಳನ್ನು ಸಮಾನವಾಗಿ ಪರಿಗಣಿಸಿಲಾಗಿದೆ. ರಾಜ್ಯಗಳ ಜನರು ಶಾಂತಿ ರೀತಿಯಿಂದ ವರ್ತಿಸುವಂತೆ ಮನವಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೂ ಸೂಚಿಸಿತು.

Share This Article
Leave a Comment

Leave a Reply

Your email address will not be published. Required fields are marked *