ರಾತ್ರೋರಾತ್ರಿ ಶಾಸಕರಿದ್ದ ರೆಸಾರ್ಟ್ ಗೆ ಕುಮಾರಸ್ವಾಮಿ ಭೇಟಿ!

Public TV
1 Min Read

ಚಿಕ್ಕಬಳ್ಳಾಪುರ: ಇಲ್ಲಿನ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‍ಗೆ ರಾತ್ರೋ ರಾತ್ರಿ ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ.

ದೇವನಹಳ್ಳಿ ತಾಲೂಕು ಕೋಡಗುರ್ಕಿ ಬಳಿಯ ರೆಸಾರ್ಟ್ ಗೆ ಭಾವಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬಳಿಕ ಜೆಡಿಎಸ್ ಶಾಸಕರು ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ಕೆ ಸುಧಾಕರ್ ಅವರು ಕೂಡ ಜೆಡಿಎಸ್ ಶಾಸಕರಿದ್ದ ರೆಸಾರ್ಟ್ ಗೆ ಭೇಟಿ ನಿಡಿದ್ದಾರೆ. ಅಲ್ಲದೇ ಹೆಚ್ ಡಿಕೆ ಜೊತೆ ಮಾತುಕತೆ ನಡೆಸಿ ವಾಪಸ್ಸಾಗಿದ್ದಾರೆ.

ರಾಜ್ಯ ವಿಧಾನಸಭಾ ಫಲಿತಾಂಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ರೂ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ವಿಫಲವಾಯಿತು. ಆದ್ರೂ ನಾನೇ ಸಿಎಂ ಎಂದು ಹೇಳಿಕೊಂಡು ಬಂದಿದ್ದ ಯಡಿಯೂರಪ್ಪ ಅವರು ರಾಜ್ಯಪಾಲರ ಅನುಮತಿ ಪಡೆದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.

ಈ ಮಧ್ಯೆ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಹೀಗಾಗಿ ಎರಡು ಪಕ್ಷಗಳ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿಯವರು ತಮ್ಮ ತೆಕ್ಕೆಗೆ ಎಳೆದುಕೊಳ್ಳಲು ಪ್ರಯತ್ನಿಸಿದ್ದರು. ಹೀಗಾಗಿ ಭಾರೀ ಹೈಡ್ರಾಮಾವೇ ನಡೆದಿತ್ತು.

ಇತ್ತ ವಿಧಾನಸಭಾ ಕಲಾಪ ನಡೆಯುತ್ತಿದ್ದಂತೆಯೇ ಶಾಸಕ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಬಾರದೇ ಇರುವುದು ಕಾಂಗ್ರೆಸ್ ಗೆ ಭಾರೀ ಆತಂಕವೇ ಎದುರಾಗಿತ್ತು. ಕೊನೆಗೆ ಡಿಕೆಶಿ ಅವರೇ ಈ ಇಬ್ಬರು ಶಾಸಕರನ್ನು ತಮ್ಮ ಪಕ್ಷಕ್ಕೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ವಿಶ್ವಾಸ ಮತ ಸಾಬೀತು ಪಡಿಸುವವರೆಗೆ ಆಪರೇಷನ್ ಕಮಲದ ಭೀತಿಯಿದ್ದು, ಪರಿಣಾಮ ಇಬ್ಬರು ಶಾಸಕರು `ಕೈ’ ಬಿಟ್ಟು ಹೋಗದಂತೆ ಕಾಂಗ್ರೆಸ್ ನಾಯಕರು ನೋಡಿಕೊಳ್ಳುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *