ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ

Public TV
1 Min Read

ವಿಜಯಪುರ: ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯೋಜನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ತಲೆ ಕೆಳಗಾಗಿಸಿದ್ದಾರೆ.

ಇಂದು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇದರಲ್ಲಿ ಮೇಯರ್ ಸ್ಥಾನ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ಲೋಗಾಂವಿ ಅವರ ಪಾಲಾಗಿದೆ. ಇತ್ತ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿ ಗೋಪಾಲ್ ಘಟಕಾಂಬಳೆ ಸ್ಪರ್ಧಿಸಿದ್ದರು. ಹೀಗಾಗಿ ಎಂ.ಬಿ.ಪಾಟೀಲ್ ಸಲಹೆಯಂತೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡಿ ಆಯ್ಕೆ ಮಾಡಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಯ ಗೆಲುವಿನಿಂದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ತೀವ್ರ ಮುಖಭಂಗ ಉಂಟಾಗಿದೆ. ಮೇಯರ್ ಶ್ರೀದೇವಿ ಲೋಗಾಂವಿ 20 ಮತ ಗಳಿಸಿ ಜಯ ಸಾಧಿಸಿದ್ದರೇ, ಗೋಪಾಲ್ ಘಟಕಾಂಬಳೆ 26 ಮತಗಳ ಮೂಲಕ ಗೆಲುವಿನ ನಗೆ ಬೀರಿದರು.

ಇತ್ತ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸಂತೋಷ್ ಚವ್ಹಾಣ್ 4 ಮತಗಳ ಅಂತರದಿಂದ ಸೋಲಬೇಕಾಯಿತು. ಮೇಯರ್-ಉಪಮೇಯರ್ ಆಯ್ಕೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್, ನಾಗಠಾಣ ಶಾಸಕ ದೇವಾನಂದ ಚವ್ಹಾಣ್, ತಲಾ ಒಬ್ಬರಂತೆ ಸಂಸದ ಹಾಗೂ ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಬಹುದಾಗಿದೆ. ಆದರೆ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಅರುಣ ಶಾಪೂರ್, ಪಕ್ಷೇತರ ಕಾರ್ಪೊರೇಟರ್ ರವಿ ಲೋಣಿ ಚುನಾವಣೆಯಿಂದ ದೂರ ಉಳಿದಿದ್ದರು. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎನ್ನಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘನ್ನವರ್ ಚುನಾವಣೆಯನ್ನು ನಡೆಸಿಕೊಟ್ಟರು.

Share This Article
Leave a Comment

Leave a Reply

Your email address will not be published. Required fields are marked *