ಮುತ್ತತ್ತಿ ಆಂಜನೇಯ ಸ್ವಾಮಿ ದೇವಸ್ಥಾನ ಬಂದ್

Public TV
1 Min Read

ಮಂಡ್ಯ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಳವಳ್ಳಿ ತಾಲೂಕಿನ ಪ್ರಸಿದ್ಧ ಮುತ್ತತ್ತಿ ಆಂಜನೇಯ ಸ್ವಾಮಿ ದೇವಾಲಯವನ್ನು ಬಂದ್ ಮಾಡಿರುವುದಾಗಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೇ ಕೆಆರ್‍ಎಸ್ ಅಣೆಕಟ್ಟಿನಿಂದಲೂ ಕಾವೇರಿ ನದಿಗೆ 1.20 ಲಕ್ಷ ಕ್ಯೂಸೆಕ್ ನೀರನ್ನು ಹರಿದುಬಿಡಲಾಗಿದೆ. ಹೀಗಾಗಿ ಕಾವೇರಿ ತಟದಲ್ಲೇ ಬರುವ ಮಳವಳ್ಳಿ ತಾಲೂಕಿನ ಅರಣ್ಯವ್ಯಾಪ್ತಿಯಲ್ಲಿನ ಮುತ್ತತ್ತಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಪ್ರವಾಸಿಗರು ಹಾಗೂ ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

ಮುತ್ತತ್ತಿಗೆ ಪ್ರತಿನಿತ್ಯ ಬರುವ ಸಾವಿರಾರು ಜನರು ಕಾವೇರಿ ನದಿಯಲ್ಲಿ ಮಿಂದು ಆಂಜನೇಯ ಸ್ವಾಮಿಯನ್ನು ದರ್ಶನ ಪಡೆಯುವುದು ಪ್ರತೀತಿ. ಆದರೆ ಕಾವೇರಿ ನದಿಯು ಅಪಾಯದ ಮಟ್ಟಮೀರಿ ಹರಿಯುತ್ತಿರುವುದರಿಂದ ಪ್ರವಾಸಿಗರನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟರೆ ಅವರು ನದಿಗಿಳಿದು ಪ್ರಾಣ ಕಳೆದುಕೊಳ್ಳುವ ಸಂಭವ ಹೆಚ್ಚುತ್ತದೆ. ಅಷ್ಟೇ ಅಲ್ಲದೇ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಇರುವ ರಸ್ತೆಗಳ ಮೇಲೂ ಸಹ ನೀರು ಹರಿಯುತ್ತಿದೆ. ಹೀಗಾಗಿ ಮುತ್ತತ್ತಿ ಅರಣ್ಯ ಪ್ರದೇಶ ಪ್ರವೇಶಕ್ಕೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ನಿಷೇಧ ಹೇರಿದೆ.

ಈಗಾಗಲೇ ಮುತ್ತತ್ತಿ ಪ್ರವಾಸಕ್ಕೆ ಬರುತ್ತಿರುವವರನ್ನು ಚೆಕ್‍ಪೋಸ್ಟ್ ಬಳಿಯೇ ತಡೆದು ವಾಪಸ್ ಕಳುಹಿಸಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಮುತ್ತತ್ತಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *