ಕಳಂಕಿತರ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ- ಸಂಸತ್ ಕಾನೂನು ರೂಪಿಸಲಿ: ಸುಪ್ರೀಂ

Public TV
2 Min Read

ನವದೆಹಲಿ: ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಚುನಾವಣೆಗೆ ನಿಲ್ಲುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೋಷಾರೋಪ ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂದು ಸರ್ಕಾರೇತರ ಸಂಸ್ಥೆ ಮತ್ತು ಬಿಜೆಪಿ ನಾಯಕ ಅಶ್ವನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಕಳಂಕಿತರು ಚುನಾವಣೆಗೆ ಸ್ಪರ್ಧೆ ಮಾಡದಂತೆ ಸಮರ್ಪಕ ಕಾಯ್ದೆ ರೂಪಿಸುವಂತೆ ಮಂಗಳವಾರ ಸಂಸತ್ತಿಗೆ ಸೂಚಿಸಿದೆ.

ಚಾರ್ಜ್ ಶೀಟ್ ಆಧರಿಸಿ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕೇಂದ್ರ ಕಾಯ್ದೆ ರೂಪಿಸುವವರೆಗೂ ಕ್ರಿಮಿನಲ್ ಹಿನ್ನೆಲೆ ಹೊಂದಿದ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಉತ್ತಮ ಜನರಿಂದ ಆಳ್ವಿಕೆ ಪಡೆದುಕೊಳ್ಳುವುದು ನಮ್ಮ ಹಕ್ಕು. ಈ ಕುರಿತು ಕಾಯ್ದೆ ರೂಪಿಸಲು ಅದಷ್ಟು ಬೇಗ ಕಾರ್ಯಾರಂಭ ಮಾಡಿದರೆ ಒಳಿತು ಎಂದು ಸುಪ್ರೀಂ ಈಗ ಈ ಚೆಂಡನ್ನು ಸಂಸತ್ ಅಂಗಳಕ್ಕೆ ಎಸೆದಿದೆ. ಅಲ್ಲದೇ ಜನರೇ ರಾಜಕಾರಣಿಗಳ ಭವಿಷ್ಯ ನಿರ್ಧರಿಸುವವರು ಎಂದಿದೆ.

ರಾಜಕೀಯ ಪಕ್ಷಗಳು ಕೂಡ ತಮ್ಮ ಅಭ್ಯರ್ಥಿಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಅಲ್ಲದೇ ಅಭ್ಯರ್ಥಿಗಳು ಸಹ ತಮ್ಮ ಮೇಲಿರುವ ಕ್ರಿಮಿನಲ್ ಆರೋಪಗಳ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ವಿವರಗಳ ಕುರಿತು ವ್ಯಾಪಕ ಪ್ರಚಾರ ನೀಡಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಬಳಕೆ ಮಾಡಲು ರಾಜಕೀಯ ಪಕ್ಷಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಸದ್ಯ ಜಾರಿಯಲ್ಲಿರುವ ನಿಯಮಗಳ ಅನ್ವಯ ಯಾವುದೇ ವ್ಯಕ್ತಿಯ ವಿರುದ್ಧ ಆರೋಪ ಸಾಬೀತಾದರೆ ಆತನಿಗೆ 6 ವಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಆದರೆ ಅವರು ರಾಜಕೀಯ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಬಹುದಾಗಿದೆ.

ಇದೇ ವೇಳೆ ಜನಪ್ರತಿನಿಧಿಗಳು ವಕೀಲರಾಗಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಗೆ ಕೋರ್ಟ್, ಎಲ್ಲಾ ಜನ ಪ್ರತಿನಿಧಿಗಳು ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಲು ಸಾಧ್ಯವಿಲ್ಲ. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಈ ನಿಷೇಧ ವಿಧಿಸಿಲ್ಲವದ್ದರಿಂದ ಜನಪ್ರತಿನಿಧಿಗಳು ತಮ್ಮ ಅಧಿಕಾರ ಅವಧಿಯಲ್ಲಿ ವಕೀಲರಾಗಿ ಮುಂದುವರಿಯಬಹುದು ಎಂದು ಸ್ಪಷ್ಟಪಡಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Share This Article
Leave a Comment

Leave a Reply

Your email address will not be published. Required fields are marked *