ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

Public TV
3 Min Read

ನವದೆಹಲಿ: ಪಾಕಿಸ್ತಾನದ ಎಫ್ 16 ವಿಮಾನಕ್ಕೆ ತಡೆ ಒಡ್ಡಬೇಕಾದರೆ ಭಾರತಕ್ಕೆ ರಫೇಲ್ ಯುದ್ಧ ವಿಮನ ಅಗತ್ಯವಿದೆ ಎಂದು ಹೇಳಿ, ರಫೇಲ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ರಫೇಲ್ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಸಂಜೀವ್ ಕಿಶನ್ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿದಾರರಾದ ಪ್ರಶಾಂತ್ ಭೂಷಣ್ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿಸಿದರು. ಈ ಸಂದರ್ಭದಲ್ಲಿ ಕೋರ್ಟ್ ಈ ಅರ್ಜಿಗೆ ಸಂಬಂಧಿಸಿದಂತೆ ನಾವು ಯಾವುದೇ ಹೊಸ ದಾಖಲೆಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಿತು.

ನ್ಯಾಯಾಲಯದಿಂದ ಈ ಅಭಿಪ್ರಾಯ ಬಂದ ಕೂಡಲೇ, ಈ ದಾಖಲೆಗಳು ಸೂಕ್ಷವಾಗಿದ್ದು, ರಕ್ಷಣಾ ಸಚಿವಾಲಯದ ಮೂಲಗಳಿಂದ ನಾನು ಪಡೆದಿದ್ದೇನೆ ಪ್ರಶಾಂತ್ ಭೂಷಣ್ ತಿಳಿಸಿದರು. ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ಕೆಸಿ ವೇಣುಗೋಪಾಲ್, ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿರುವ ಮಾಹಿತಿಯನ್ನು ಆಧಾರವಾಗಿ ಇಟ್ಟುಕೊಂಡು ಉಲ್ಲೇಖಿಸಿ ವರದಿಯನ್ನು  ಪ್ರಶಾಂತ್ ಭೂಷಣ್ ಹೇಳುತ್ತಿದ್ದಾರೆ. ರಕ್ಷಣಾ ಇಲಾಖೆಯ ಮಾಜಿ ಅಥವಾ ಹಾಲಿ ಉದ್ಯೋಗಿಗಳು ದಾಖಲೆಗಳನ್ನು ಕದ್ದಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾ. ರಂಜನ್ ಗೊಗೋಯ್ ಈ ಸಂಬಂಧ ಸರ್ಕಾರ ಏನು ಕ್ರಮವನ್ನು ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ತನಿಖೆ ನಡೆಯುತ್ತಿದೆ ಎಂದು ಎಜೆ ಉತ್ತರಿಸಿದರು.

ರಫೇಲ್ ಸುದ್ದಿ ಪ್ರಕಟಿಸಿ ವಿಚಾರಣೆ ವೇಳೆ ಪ್ರಭಾವ ಮೂಡಿಸುವ ಯತ್ನ ನಡೆಯುತ್ತಿದೆ. ಈ ಕಾರಣಕ್ಕಾಗಿ ಮಂಗಳವಾರ ಒಂದು ಸುದ್ದಿ ಪ್ರಕಟವಾಗಿದ್ದರೆ ಇಂದು ಇನ್ನೊಂದು ಸುದ್ದಿ ಪ್ರಕಟವಾಗಿದೆ. ಈ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಅರ್ಜಿದಾರರು ವಾದಿಸುತ್ತಿದ್ದಾರೆ. ಅರ್ಜಿದಾರರು ಉಲ್ಲೇಖಿಸಿದ ಮಾಹಿತಿ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಮತ್ತು ನ್ಯಾಯಾಂಗದ ಉಲ್ಲಂಘನೆಯಾಗಿದೆ. ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬಾರದು. ಹೀಗಾಗಿ ಇದು ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ. ಈ ದಾಖಲೆಗಳನ್ನು ಯಾವುದೇ ಕಾರಣಕ್ಕೆ ಅರ್ಜಿಯ ಜೊತೆ ಪರಿಗಣಿಸಬಾರದು ಎಂದು ವಾದಿಸಿದರು.

ರಫೇಲ್ ಖರೀದಿ ಪ್ರಕ್ರಿಯೆ ನ್ಯಾಯಾಂಗದ ಪರಾಮರ್ಶೆಯ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೀರ್ಪು ಮರುಪರಿಶೀಲನೆ ನಡೆಸಬೇಕೆಂದು ಸಲ್ಲಿಕೆಯಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಬೇಕೆಂದು ಎಜಿ ಮನವಿ ಮಾಡಿದರು.

ಏರ್ ಸರ್ಜಿಕಲ್ ಸ್ಟ್ರೈಕ್ ನಡೆದ ಬಳಿಕ ಪಾಕ್ ಸೇನೆಯ ದಾಳಿಯನ್ನು ಪ್ರಸ್ತಾಪಿಸಿದ ಎಜೆ, ಒಂದು ವೇಳೆ ಎಫ್ 16 ವಿಮಾನಗಳಿಗೆ ತಡೆ ಒಡ್ಡಬೇಕಾದರೆ ರಫೇಲ್ ದೇಶಕ್ಕೆ ಅಗತ್ಯವಿದೆ. ಈಗಾಗಲೇ ತರಬೇತಿಗಾಗಿ ನಮ್ಮ ಪೈಲಟ್ ಗಳು ಪ್ಯಾರಿಸ್ ಗೆ ತೆರಳಿದ್ದಾರೆ. ಇದೇ ಸೆಪ್ಟೆಂಬರ್ ನಲ್ಲಿ ಹಾರಲು ಸಿದ್ಧವಾಗಿರುವ ಸ್ಥಿತಿಯಲ್ಲಿರುವ ರಫೇಲ್ ವಿಮಾನ ವಾಯುಸೇನೆಗೆ ಸೇರ್ಪಡೆಯಾಗಲಿದೆ ಎಂದು ಹೇಳಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ವಿಚಾರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ವಿಚಾರವನ್ನು ಉಲ್ಲಂಘಿಸಿ ಸರ್ಕಾರಿ ದಾಖಲೆಯನ್ನು ಪ್ರಕಟಿಸಿದ್ದಕ್ಕಾಗಿ ಎರಡು ಮಾಧ್ಯಮಗಳ ವಿರುದ್ಧ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಎಜೆ ನ್ಯಾಯಾಲಯಕ್ಕೆ ತಿಳಿಸಿದರು.

ದೀರ್ಘವಾಗಿ ವಾದ, ಪ್ರತಿವಾದವನ್ನು ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಮಾರ್ಚ್ 14ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿತು.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಕೇಂದ್ರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಯಲ್ಲೇ ಕೇಂದ್ರ ಸರ್ಕಾರ ತೀರ್ಪಿನ ಉಲ್ಲೇಖ ಇರುವ ವಾಕ್ಯದಲ್ಲಿ ಕೆಲವು ತಿದ್ದುಪಡಿಗಳಾಗಬೇಕಿದೆ ಎಂದು ಅಫಿಡವಿಟ್ ಮನವಿ ಸಲ್ಲಿಸಿತ್ತು. ಮಹಾಲೇಖಪಾಲರ ವರದಿ(ಸಿಎಜಿ) ಹಾಗೂ ಪಿಎಸಿಗೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ದಾಖಲೆಗಳ ವಿಷಯವನ್ನು ತಪ್ಪಾಗಿ ವ್ಯಾಖ್ಯಾನ ಮಾಡಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋರ್ಟ್ ಮೊರೆ ಹೋಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *