ಸುಮಲತಾ ಗೆದ್ದ ಬಳಿಕ ಬಿಜೆಪಿ ಸೇರುತ್ತಾರೆ: ರಮೇಶ ಜಿಗಜಿಣಗಿ

Public TV
1 Min Read

– ನಮ್ಮ ಮೇಲೆ ಆರೋಪ ಮಾಡಿದವರು ಹಾಳಾಗಿ ಹೋಗುತ್ತಾರೆ

ವಿಜಯಪುರ: ಮಂಡ್ಯದಲ್ಲಿ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಗೆಲ್ಲುತ್ತಾರೆ. ಬಳಿಕ ನಮ್ಮ ಪಕ್ಷಕ್ಕೆ ಸೇರುತ್ತಾರೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಸುಮಲತಾ ಅವರಿಗೆ ಬೆಂಬಲ ನೀಡಲಾಗುತ್ತದೆ ಎಂದು ಹೇಳಿದರು.

ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಹಾಕಿ ಕೈ ಸುಟ್ಟುಕೊಂಡಿದ್ದೇವೆ. ಹೀಗಾಗಿ ಈ ಬಾರಿ ಅಭ್ಯರ್ಥಿಯನ್ನು ಹಾಕುವ ವಿಚಾರದಿಂದ ನಾಯಕರು ದೂರ ಸರಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕೆ ಇಳಿದ ಸುಮಲತಾ ಅವರನ್ನು ಬೆಂಬಲಿಸುತ್ತಿದ್ದೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಲೆ, ಕೇಂದ್ರ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸ ಹಾಗೂ ಸಾಧನೆಗಳಿಂದಾಗಿ ಈ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ವಿಜಯಪುರ ಕ್ಷೇತ್ರದ ಪ್ರಚಾರಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಈ ನಿಟ್ಟಿನಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ಕಡೆ ಬೃಹತ್ ಸಮಾವೇಶ ಮಾಡಲು ಪಕ್ಷದ ರಾಜ್ಯ ನಾಯಕರು ಮುಂದಾಗಿದ್ದಾರೆ. ಈ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಬೇಕು ಎನ್ನುವುದು ನಮ್ಮ ಆಶಯವಾಗಿದೆ ಎಂದರು.

ಐಟಿ ದಾಳಿಯ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಾಯಕ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ನಮ್ಮ ಮೇಲೆ ಆರೋಪ ಮಾಡುವವರು ಹಾಳಾಗಿ ಹೋಗುತ್ತಾರೆ. ಐಟಿ ದಾಳಿಯನ್ನು ಮಾಡುವಂತೆ ನಾವು ಹೇಳಿಲ್ಲ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *