ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಆಗಲ್ಲ ಅಂತಾರೊ ಅದಾಗುತ್ತೆ. ಏನು ಆಗತ್ತೆ ಅಂತಾರೊ ಅದು ಆಗಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಇಂದು ನಗರದಲ್ಲಿ ಟಿ.ಚನ್ನಯ್ಯ ರಂಗ ಮಂದಿರ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರವಿದೆ, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡರು.
ಸಿದ್ದರಾಮಯ್ಯ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಲ್ಲ ಎಂದರು, ಅವರು ಮತ್ತೆ ಪ್ರಧಾನಿ ಆದರೂ. ನಂತರ ವಿಧಾನಸಭೆ ಚುನಾವಣೆ ಸಮಯದಲ್ಲಿ ಈಗಿನ ಮೈತ್ರಿ ಸರ್ಕಾರದ ಸಿಎಂ ಮುಖ್ಯಮಂತ್ರಿ ಆಗಲ್ಲ ಎಂದರೂ ಅವರು ಕೂಡ ಸಿಎಂ ಆದರು. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದರು ಆದರೆ ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಸೋತರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸೋತು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿದರು.
ಇದೇ ವೇಳೆ ಹೊಸ ತಾಲೂಕುಗಳಿಗೆ ರಾಜ್ಯ ಸರ್ಕಾರ ಪ್ರಾಮುಖ್ಯತೆ ನೀಡಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ ರಾಜ್ಯದಲ್ಲಿ ಹೆಸರಿಗೆ ಮಾತ್ರ ಒಂದು ಸರ್ಕಾರವಿದೆ. ಸರ್ಕಾರದಿಂದ ಜನರಿಗೆ ಯಾವುದೇ ಲಾಭವಿಲ್ಲ, ಕೆಲಸಗಳು ಆಗುತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್ ಸೋತಿದ್ದು, ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಉಸ್ತುವಾರಿ ಮಂತ್ರಿಗಳು ಜಿಲ್ಲೆಗಳಿಗೆ ಹೋಗುತ್ತಿಲ್ಲ ಎಂದು ಸಮ್ಮಿಶ್ರ ಸರ್ಕಾರದ ವಿರುದ್ದ ಕಿಡಿಕಾರಿದರು.