ಹುಬ್ಬಳ್ಳಿಯಲ್ಲಿ ನಿರ್ಮಲಾ ಸೀತಾರಾಮನ್‍ಗೆ ತಟ್ಟಿತು ಪ್ರತಿಭಟನೆ ಬಿಸಿ

Public TV
1 Min Read

ಧಾರವಾಡ(ಹುಬ್ಬಳ್ಳಿ): ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಎದುರು ಮಾಜಿ ಸಚಿವ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ವಿ.ದೇಶಪಾಂಡೆ, ಕೇಂದ್ರ ಸರ್ಕಾರ 1,200 ಕೋಟಿ ರೂ. ಬಿಡುಗಡೆ ಮಾಡಿದೆ ಅನ್ನೋ ಮಾಹಿತಿ ಕೇಳಿದ್ದೇನೆ. ಕನಿಷ್ಠ ಪಕ್ಷ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಇಷ್ಟೊಂದು ಪ್ರಮಾಣದಲ್ಲಿ ನೆರೆ ಬರದಿದ್ದರೂ, 16 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಇಂದು ರಾಜ್ಯದ ಬಹುತೇಕ ಜಿಲ್ಲೆಗಳು ಅನಾವೃಷ್ಠಿಗೀಡಾಗಿವೆ. ಸರ್ಕಾರ ನೀಡಿದ ಹಣ ಸಂತ್ರಸ್ತರಿಗೆ ತಲುಪಿಲ್ಲ. ಜನ ಬೀದಿಪಾಲಾಗುತ್ತಿದ್ದು, ಇಷ್ಟೊಂದು ಮಟ್ಟದಲ್ಲಿ ಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಇನ್ನೂ ಕ್ರಿಯಾಶೀಲರಾಗಬೇಕಿತ್ತು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಧಾರವಾಡದ ಡಾ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಆಯೋಜನೆಗೊಂಡಿರುವ ರಾಷ್ಟ್ರೀಯ ತೆರಿಗೆ ಸಲಹೆಗಾರ ದಿನಾಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಚಿವ ಜಗದೀಶ್ ಶೆಟ್ಟರ್, ಸಂಸದ ಶಿವಕುಮಾರ ಉದಾಸಿ, ಶಾಸಕ ಅರವಿಂದ ಬೆಲ್ಲದ ಉಪಸ್ಥಿತಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *