ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Public TV
1 Min Read

ಬೆಂಗಳೂರು: ಕರುನಾಡಿನ ತುಂಬೆಲ್ಲ ಕನ್ನಡಿಗರು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್: ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.

ಇತ್ತ ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ. ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೆ ಭಗವಾಧ್ವಜ ಹಾರಿಸಬೇಕೆ? ಎಂದು ಕಿಡಿ ಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *