ಮಂಗ್ಳೂರು ಏರ್‌ಪೋರ್ಟಿನಲ್ಲಿ ಹೈಡ್ರಾಮಾ – ಕೈ ಮುಖಂಡರು ಪೊಲೀಸರ ವಶಕ್ಕೆ

Public TV
1 Min Read

ಮಂಗಳೂರು: ಜಿಲ್ಲೆಯಲ್ಲಿ ನಡೆದ ಗೋಲಿಬಾರಿನಲ್ಲಿ ಮೃತಪಟ್ಟವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ ಕೊಡಲು ಬಂದಿದ್ದರು. ಆದರೆ ಈ ವೇಳೆ ಪೊಲೀಸರು ಬಜ್ಪೆ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಉಗ್ರಪ್ಪ, ಎಂ.ಬಿ,ಪಾಟೀಲ್, ಮಾಜಿ ಸಚಿವ ಸೀತಾರಾಮ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಹೈಡ್ರಾಮಾವೇ ನಡೆದಿದೆ.

ಕಾಂಗ್ರೆಸ್ ನಿಯೋಗ ಇಂದು ಪೊಲೀಸ್ ಗೋಲಿಬಾರಿನಲ್ಲಿ ಮೃತಪಟ್ಟ ಇಬ್ಬರ ಮನೆಗೆ ಭೇಟಿ ಕೊಡಲು ಹಾಗೂ ಆಸ್ಪತ್ರೆಯಲ್ಲಿ ಇರುವವರಿಗೆ ಸಾಂತ್ವನ ಹೇಳಲು ಮಂಗಳೂರಿಗೆ ಆಗಮಿಸಿತ್ತು. ಅವರನ್ನು ಪೊಲೀಸರು ವಿಮಾನ ನಿಲ್ದಾಣದಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ವಾಪಸ್ ಹೋಗಲು ನಿರಾಕರಿಸಿದ್ದಾರೆ. ಆಗ ಪೊಲೀಸರು ನಿಮ್ಮನ್ನು ವಶಕ್ಕೆ ಪಡೆಯುತ್ತೇವೆ ಎಂದಾಗ ಹೈಡ್ರಾಮಾ ಸೃಷ್ಟಿಯಾಗಿತ್ತು.

ಈ ವೇಳೆ ರಮೇಶ್ ಕುಮಾರ್ ಪೊಲೀಸರ ಮೇಲೆ ಕಿರುಚಾಡಿದ್ದಾರೆ. ನಾವು ಕಾನೂನುಬಾಹಿರ ಕೆಲಸವನ್ನು ಮಾಡಲು ಬಂದಿಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ. ನೀವು ನಮ್ಮನ್ನು ಬಂಧಿಸಬಾರದು ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಎಳೆದಾಟವಾಗಿದೆ. ಕೊನೆಗೆ ಪೊಲೀಸರು ಅವರನ್ನು ಬಿಡದೆ ತಮ್ಮ ಜೀಪ್‍ನಲ್ಲಿ ಕರೆದುಕೊಂಡು ಸ್ಥಳೀಯ ಪೊಲೀಸ್ ಠಾಣೆಗೆ ಕರೆದಕೊಂಡು ಹೋಗಿದ್ದಾರೆ.

ಇಂದು ಸಂಜೆ ವೇಳೆ ಅವರನ್ನು ಪೊಲೀಸ್ ಠಾಣೆಯಿಂದ ನೇರವಾಗಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು  ಬಂದು ಬಿಡಲಾಗುತ್ತದೆ. ಅಲ್ಲಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸುವ ಸಾಧ್ಯತೆ ಇದೆ. ಕರ್ಫ್ಯೂ ಇರುವುದರಿಂದ ಮಂಗಳೂರಿನಲ್ಲಿ ಯಾರಿಗೂ ಓಡಾಡಲು ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ.

 

Share This Article
Leave a Comment

Leave a Reply

Your email address will not be published. Required fields are marked *