ಮೈಸೂರಿನಲ್ಲಿ ಸ್ಟೂಡೆಂಟ್ಸ್ ವರ್ಸಸ್ ಟೀಚರ್ ಪ್ರತಿಭಟನೆ

Public TV
1 Min Read

ಮೈಸೂರು: ನಗರದ ಹೊರವಲಯದಲ್ಲಿನ ಎಂಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ನಡುವೆ ಗಲಾಟೆಯಾಗಿದೆ.

ಮೈಸೂರು-ನಂಜನಗೂಡು ರಸ್ತೆಯ ತಾಂಡವಪುರ ಬಳಿಯಿರುವ ಎಂಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕಿ ರಂಜಿತಾ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ತಮ್ಮ ಮೇಲೆ ಹಲ್ಲೆ ಮಾಡಿದ್ದಕ್ಕೆ ತಿರುಗಿಬಿದ್ದ ವಿದ್ಯಾರ್ಥಿಗಳು, ತರಗತಿ ಮತ್ತು ಕ್ರೀಡಾಕೂಟ ಬಹಿಷ್ಕರಿಸಿ ಪ್ರತಿಭಟಿಸಿದ್ದಾರೆ. ವಿದ್ಯಾರ್ಥಿಗಳ ಪರ ನಿಂತ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ನಾಗೇಂದ್ರ ಪ್ರಸಾದ್‍ಗೆ ರಂಜಿತಾ ಪತಿ ಚೇತನ್ ಕಪಾಳಮೋಕ್ಷ ಮಾಡಿದ್ದಾರೆ ಎಂದು ಕೂಡ ಆರೋಪಗಳು ಕೇಳಿಬರುತ್ತಿದೆ.

ಚೇತನ್ ಕಾಲೇಜಿನ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ. ವಿಭಾಗದ ಮುಖ್ಯಸ್ಥರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಪೊಲೀಸರು ಹಲ್ಲೆ ಪ್ರಕರಣದ ಬಗ್ಗೆ ನಾಗೇಂದ್ರ ಪ್ರಸಾದ್ ನೀಡಿದ ದೂರು ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *