ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

Public TV
1 Min Read

ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು ಹಕ್ಕಿಪಿಕ್ಕಿ ಜನಾಂಗಕ್ಕೆ ಸಮರ್ಪಕವಾದ ಆಹಾರ ಸಾಮಾಗ್ರಿಗಳನ್ನು ವಿತರಿಸಿದ್ದಾರೆ. ತಹಶೀಲ್ದಾರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ನಗರ ಸಭೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳದಲ್ಲಿ 28 ಹಕ್ಕಿಪಿಕ್ಕಿ ಅಲೆಮಾರಿ ಜನಾಂಗದವರು ವಾಸವಿರುವುದು ಕಂಡುಬಂದಿದ್ದು, 25 ಕುಟುಂಬಗಳಿಗೆ ಪಡಿತರ ಚೀಡಿ ಇದ್ದು ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿಯಂತೆ ಕಲ್ದೊಡ್ಡಿ ಸೊಸೈಟಿಯಲ್ಲಿ ಪಡಿತರ ವಿತರಿಸಲಾಗಿದೆ.

ಕಾರ್ಡ್ ಹೊಂದಿರುವವರ ಪೈಕಿ 4 ಕುಟುಂಬಗಳಲ್ಲಿ ಕೆಲ ಸದಸ್ಯರ ಹೆಸರು ಸೇರ್ಪಡೆಯಾಗಿಲ್ಲ. 2 ಕುಟುಂಬ ಕಾರ್ಡ್ ಪಡೆಯದ ಹಿನ್ನೆಲೆ ರದ್ದಾಗಿದ್ದು, 1 ಕುಟುಂಬಕ್ಕೆ ಪಡಿತರ ಚೀಟಿ ಸಿಕ್ಕಿಲ್ಲ. ಕಡುಬಡತನ ಕುಟುಂಬಗಳಿಗೆ ಸ್ವಯಂ ಸೇವಾ ಸಂಘ-ಸಂಸ್ಥೆಗಳ ನೆರವಿನೊಂದಿಗೆ ತಾಲೂಕು ಆಡಳಿತದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ. ಸದ್ಯಕ್ಕೆ ಇಲ್ಲಿನ ಕುಟುಂಬಗಳಿಗೆ ಆಹಾರದ ಕೊರತೆ ಇಲ್ಲ. ಮುಂದಿನ ದಿನಗಳಲ್ಲೂ ಯಾವುದೇ ರೀತಿಯ ಆಹಾರ ಪದಾರ್ಥಗಳ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *