ಗದಗ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಭಾರೀ ಅನಾಹುತಗಳು ಸಂಭವಿಸುತ್ತಿವೆ. ಒಂದೆಡೆ ಬೆಳೆ ಮುಳುಗಡೆಯಾದರೆ, ಇನ್ನೊಂದೆಡೆ ಮನೆಗಳು ಕುಸಿಯುತ್ತಿವೆ.
ನಿರಂತರ ಮಳೆಗೆ ಜಿಲ್ಲೆಯ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಮನೆ ಕುಸಿದು ಮಣ್ಣಿನಡಿ ಸಿಲುಕಿ ವೃದ್ಧೆ ಸಾವನ್ನಪ್ಪಿದ್ದಾರೆ. 63 ವರ್ಷದ ಶಂಕ್ರಮ್ಮ ಭೀಮನಗೌಡ್ರ ಮೃತ ವೃದ್ಧೆ. ಬೆಳಗಿನಜಾವ ಬಹಿರ್ದೆಸೆಗೆ ಹೋಗಿ ಬರುವ ವೇಳೆ ದುರ್ಘಟನೆ ಸಂಭವಿಸಿದೆ. ಇನ್ನೇನು ಮನೆ ಒಳಗೆ ಹೋಗಬೇಕು ಎನ್ನುವಷ್ಟರಲ್ಲಿ ವೃದ್ಧೆಯ ಮೇಲೆ ಎದುರು ಇರುವ ಮಣ್ಣಿನ ಮನೆ ಬಿದ್ದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಿಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೂ ಪ್ರಯೋಜನವಾಗಲಿಲ್ಲ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.