ಹುಣಸೋಡು ಸ್ಫೋಟ ಪ್ರಕರಣ- 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Public TV
2 Min Read

– 7 ಗ್ರಾಮದ 1,422 ಕುಟುಂಬಗಳಿಗೆ ತೊಂದರೆ
– 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸಿದ ಬ್ಲಾಸ್ಟ್ ನಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ಹಲವು ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಐವರ ಮೃತದೇಹಗಳು ಪತ್ತೆಯಾಗಿವೆ. ಸ್ಫೋಟದಿಂದ ಜೀವ ಹಾನಿ ಜೊತೆಗೆ ಆಸ್ತಿ ಪಾಸ್ತಿ ಸಹ ಹಾನಿಯಾಗಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ 1,422 ಕುಟುಂಬಗಳಿಗೆ ತೊಂದರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗದ ಹುಣಸೋಡು ಗ್ರಾಮದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಜಿಲ್ಲೆಯ ಅಬ್ಬಲೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹೂಣಸೊಂಡ, ಬಸವನಗಂಗೂರು, ಕಲ್ಲುಗಂಗೂರು, ಅಬ್ಬಲಗೆರೆಯಲ್ಲಿ 150 ಕ್ಕು ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಬ್ಬಲಗೆರೆ ಸೇರಿ ಒಟ್ಟು 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ ಎನ್ನುವಂತಾಗಿದ್ದು, ಹೂಣಸೊಂಡದಲ್ಲಿ ಆಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಕಲ್ಲುಗಂಗೂರು ಗ್ರಾಮದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ತಗಡಿನ ಶೀಟ್, ಸಿಮೆಂಟ್ ಶೀಟ್ ಹಾಗೂ ಹೆಂಚಿನ ಮನಗೆಳನ್ನು ರಿಪೇರಿ ಮಾಡಲೇಬೇಕು ಎನ್ನುವಷ್ಟರಮಟ್ಟಿಗೆ ಹಾನಿಯಾಗಿವೆ. ಮುರಿದ, ಬಿರುಕು ಬಿಟ್ಟ ಮನೆಗಳಲ್ಲಿ ಭೀತಿಯಲ್ಲೇ ಜನ ವಾಸ ಮಾಡುವ ಅನಿವಾರ್ಯತೆ ಎದುರಾಗಿದೆ. 7 ಗ್ರಾಮದ 1,422 ಕುಟುಂಬಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯಾಗಿದೆ ಎಂದು ಅಂದಾಜಿಸಲಾಗಿದೆ.

ಇದೀಗ ಅನಧಿಕೃತ ಗಣಿಗಾರಿಕೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜೆಲ್ ಸ್ಫೋಟಕ ಎಲ್ಲಿಂದ ಬಂತು, ಅದನ್ನು ಎಲ್ಲಿ ಸ್ಟೋರ್ ಮಾಡುತ್ತಾರೆ ಎಂಬುದನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಜಲ್ಲಿ, ಮರಳು ಬೇಕು. ಅದನ್ನು ಕಾನೂನಾತ್ಮಕವಾಗಿ ಮಾಡಬೇಕು ಎಂಬ ಬಗ್ಗೆ ಚಿಂತಿಸುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಗಣಿ ಇಲಾಖೆ ಸೇರಿ ಯಾವುದೇ ಇಲಾಖೆಯಲ್ಲಿ ಕಾನೂನು ಚೌಕಟ್ಟು ಮೀರಿ ಕೆಲಸ ಮಾಡಿದ್ದರೆ, ಯಾರೇ ತಪ್ಪು ಮಾಡಿದ್ದರೂ ಅದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅಲ್ಲದೆ ಉನ್ನತ ಮಟ್ಟದ ತನಿಖೆ ನಡೆಸಲು ಸಿಎಂ ಸಮಿತಿ ರಚನೆ ಮಾಡಿದ್ದಾರೆ.

ಈ ಬಗ್ಗೆ ಹುಣಸೋಡಿನಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಇಂತಹ ದುರ್ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಒಂದು ಸಂಶಯಾಸ್ಪದ ಇದೆ. ರಾಜ್ಯದಲ್ಲಿನ ಎಲ್ಲ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ತನಿಖೆ ನಡೆಸಲು ಶೀಘ್ರವಾಗಿ ಸಮಿತಿ ರಚಿಸಲಾಗುವುದು. ಹುಣಸೋಡು ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಘಟನೆ ರಾಜ್ಯದಲ್ಲಿ ಇನ್ನು ಎಲ್ಲಿಯೂ ನಡೆಯಬಾರದು. ಮೃತ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *