1ರಿಂದ 8ನೇ ತರಗತಿ ಶಾಲೆಗಳ ಆರಂಭ – ಆ. 30 ರಂದು ಸಿಎಂ ನೇತೃತ್ವದಲ್ಲಿ ಸಭೆ

Public TV
1 Min Read

ಧಾರವಾಡ/ಹುಬ್ಬಳ್ಳಿ: 1ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಭಾದಕಗಳನ್ನು ಅವಲೋಕಿಸಿ 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ. ದೇವಿಪ್ರಸಾದ್ ಶೆಟ್ಟಿ ಅವರು 6ರಿಂದ 8ನೇ ತರಗತಿ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಜೊತೆಗೆ ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬಂದಿದೆ. ಇದರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಆಲೋಚನೆ ವ್ಯಕ್ತವಾಗುತ್ತಿದೆ. ಆದರೆ ತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಪುನಃ ಶಿಕ್ಷಣ ನೀಡುವ ಉದ್ದೇಶದಿಂದ 1ರಿಂದ 8ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು. ಅಕಸ್ಮಾತ್ ಮೂರನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ರಾಣಾ, ರಕುಲ್, ರವಿತೇಜ, ಚಾರ್ಮಿಗೆ ಜಾರಿ ನಿರ್ದೇಶನಾಲಯದ ನೋಟಿಸ್

ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗುವಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 5 ರಿಂದ ಕೌನ್ಸಲಿಂಗ್ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಲಾಗುವುದು, ಇದರಿಂದ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಗೆ ಒಳ್ಳೆಯದಾಗುತ್ತದೆ ಎಂದರು. ಇದನ್ನೂ ಓದಿ: ನಂದಿಬೆಟ್ಟದ ಬಳಿ ಭೂಕುಸಿತ – ಕಲ್ಲು ಗಣಿಗಾರಿಕೆಯ ಬ್ಲಾಸ್ಟಿಂಗ್‍ಗೆ ಬೆದರಿದ್ವಾ ಪಂಚಗಿರಿಗಳು?

Share This Article
Leave a Comment

Leave a Reply

Your email address will not be published. Required fields are marked *