ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದಾರೆ.

basavaraj bommai

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿ ಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಕರ್ನಾಟಕ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಬೇರೆಯವರ ವ್ಯಾಕ್ಸಿನೇಷನ್ ಮಾಹಿತಿಯನ್ನೂ CoWIN ವೆಬ್‍ಸೈಟ್‍ನಲ್ಲಿ ಚೆಕ್ ಮಾಡಿ

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ.ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದಿದ್ದಾರೆ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

 

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನು ತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ, ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *