ಜ.2ರಂದು ಅನಿವಾಸಿ ಕನ್ನಡಿಗರಿಂದ ಟ್ವಿಟ್ಟರ್, ಇ-ಮೇಲ್ ಅಭಿಯಾನ

Public TV
4 Min Read

ದುಬೈ: ತಮಗಿರುವ ಸಮಸ್ಯೆಗಳ ಬಗ್ಗೆ ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ಒಗ್ಗಟ್ಟಾಗಿ ಟ್ವಿಟರ್ ಮತ್ತು ಇ-ಮೇಲ್ ಅಭಿಯಾನ ನಡೆಸಲು ಮುಂದಾಗಿದೆ. ಜನವರಿ 2ರಂದು ಮಧ್ಯಾಹ್ನ ಭಾರತೀಯ ಕಾಲಮಾನ ಸಂಜೆ 4 ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಏಕಕಾಲದಲ್ಲಿ ಚಾಲನೆ ನೀಡಿ ಸರಣಿ ಮನವಿಗಳನ್ನು, ಬೇಡಿಕೆಗಳನ್ನು ಇಡಲಿದೆ.

ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು ಉದ್ಯೋಗ ಹರಸಿ ವಿದೇಶಕ್ಕೆ ತೆರಳಿದರೂ ಹುಟ್ಟೂರು ಮತ್ತು ರಾಜ್ಯದ ಆಗುಹೋಗುಗಳ ಬಗ್ಗೆ ಅತಿ ಹೆಚ್ಚು ಕಾಳಜಿ ತೋರಿಸುವವರು ಅನಿವಾಸಿ ಕನ್ನಡಿಗರು, ರಾಜ್ಯದಲ್ಲಿ ನೆರೆ ಬಂದರೂ, ಬರ ಬಂದರೂ, ಯಾವುದೇ ಸಂಕಷ್ಟ ಬಂದೊದಗಿದರೂ ತಕ್ಷಣ ಸಹಾಯಹಸ್ತ ಚಾಚುವವರೇ ಲಕ್ಷಾಂತರ ಅನಿವಾಸಿಗಳು. ಆದರೆ ಆಶ್ಚರ್ಯವೆಂದರೆ ಈ ಅನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲ, ಬಹುಕಾಲದಿಂದ ಅವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಇದ್ದರೂ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಕೊರೊನಾ ಸಂಕಷ್ಟ ಸಂದರ್ಭದಲ್ಲಂತೂ ಇವರ ಗೋಳನ್ನು ಕೇಳುವವರೇ ಇರಲಿಲ್ಲ. ಇದೇ ಕಾರಣಕ್ಕೆ ಇದೀಗ ಅನಿವಾಸಿಗಳು ಒಗ್ಗಟ್ಟಾಗಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲೆಂದೇ ಒಂದು ದಿನವನ್ನು ಆಚರಿಸಲು ನಿರ್ಧರಿಸಿದ್ದು, ಅಭಿಯಾನದ ವಿಶಿಷ್ಟ ರೀತಿಯಲ್ಲಿ ಕರ್ನಾಟಕ ಸರ್ಕಾರದ ಕದತಟ್ಟಿ ಈ ಬಾರಿಯಾದರೂ ತಮ್ಮನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು, ಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

12 ವರ್ಷಗಳ ಹಿಂದೆ ರಾಜ್ಯಸರ್ಕಾರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಕ್ಷೇಮಾಭಿವೃದ್ಧಿಯಗಾಗಿ ಸ್ಥಾಪಿತವಾದ ಸಮಿತಿಯೇ ಕನ್ನಡಿಗರ ಅನಿವಾಸಿ ಭಾರತೀಯ ಸಮಿತಿ. ಸಿಎಂ ಅವರ ನೇರ ನಿಯಂತ್ರಣಕ್ಕೆ ಒಳಪಡುವ ಈ ಸಮಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಈ ಸಮಿತಿ ಬಂದರೂ ಮುಖ್ಯಮಂತ್ರಿಗಳೇ ಇದರ ಅಧ್ಯಕ್ಷರು, ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ ಜವಾಬ್ದಾರಿಳಿರುವ ಕಾರಣ ಉಪಾಧ್ಯಕ್ಷರಿಗೇ ಈ ಸಮಿತಿಯಗೆ ಬೆನ್ನೆಲುಬು. ಆದರೆ ಕಳೆದ ಮೂರು ವರ್ಷಗಳಿಂದ ಈ ಸಮಿತಿಗೆ ಉಪಾಧ್ಯಕ್ಷರೇ ಇಲ್ಲದೇ ಅನಾಥವಾಗಿದೆ.

ಎನ್‍ಆರೈ ಘಟಕದ ಉಪಾಧ್ಯಕ್ಷ ಕೂಡಲೇ ನೇಮಕವಾಗಬೇಕು, ಅದೂ ಅನಿವಾಸಿಗಳ ಬಗ್ಗೆ ಅರಿವಿರುವ ಒಬ್ಬ ಅನಿವಾಸಿ ಕನ್ನಡಿಗನೇ ಈ ಸ್ಥಾನಕ್ಕೆ ನೇಮಕವಾದರೆ ಅನಿವಾಸಿಗಳಿಗೆ ಅನುಕೂಲ, ಎಲ್ಲರೂ ನೇರವಾಗಿ ಸಿಎಂ ಅವರನ್ನು ಭೇಟಿಯಾಗಲು ಸಾಧ್ಯವಿಲ್ಲ, ಉಪಾಧ್ಯಕ್ಷರಿದ್ದರೆ ಸಮಸ್ಯೆ ತಿಳಿಸಲು ಸುಲಭ. ಇದಷ್ಟೇ ಅಲ್ಲದೆ ತಮ್ಮಲ್ಲಿರುವ ಹಲವಾರು ಸಮಸ್ಯೆಗಳ, ಬೇಡಿಕೆಗಳ ಪಟ್ಟಿಯೊಂದಿಗೆ ವಿಶ್ವದಾದ್ಯಂತ ಅನಿವಾಸಿ ಕನ್ನಡಿಗರು ಸರ್ಕಾರಕ್ಕೆ ಮನವಿ ಸಲ್ಲಿಸಲು ಜನವರಿ 2ರಂದು ‘ಎನ್‍ಆರೈ ಅಪೀಲ್ ಡೇ’ ಎಂದು ಟ್ವಿಟ್ಟರ್ ಅಭಿಯಾನ ಮತ್ತು ಇಮೇಲ್ ಮೂಲಕ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ, ನೂರಾರು ಕನ್ನಡ ಪರ ಸಂಘಟನೆಗಳು ಭಾಗವಹಿಸಲಿದೆ ಎಂದು ಅಂತರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.

ನಾವು ಕರ್ನಾಟಕವನ್ನು, ಕನ್ನಡವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವವರು, ನಮಗೆ ಈ ಬಗ್ಗೆ ಹೆಮ್ಮೆಯಿದೆ, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅನಿವಾಸಿಗಳ ಗೋಳನ್ನು ಕೇಳುವವರು ಯಾರೂ ಇರಲಿಲ್ಲ, ಏಕೆಂದರೆ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರೇ ಇರಲಿಲ್ಲ! ಇನ್ನಾದರೂ ನೇಮಿಸಿ, ಇನ್ನಾದರೂ ಅನಿವಾಸಿಗಳ ಮನವಿಗೆ ಸ್ಪಂದಿಸಿ ಎಂದು ಕನ್ನಡ ಸಂಘ ಇಟಲಿ ಅಧ್ಯಕ್ಷ ಹೇಮೇಗೌಡ ಮಧು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಾಳೆಯಿಂದ ಎರಡು ದಿನ ಕೇಸರಿ ಕಹಳೆ – ಕೆಲ ಸಚಿವರಿಗೆ ಢವಢವ, ಜೆ.ಪಿ.ನಡ್ಡಾ ಬರ್ತಾರಾ..?

ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಅನಿವಾಸಿಗಳು ಶಾಶ್ವತ ಪೌರತ್ವ ಪಡೆಯಲು ಬಂದವರಲ್ಲ. ಅವರು ದುಡಿದ ಪ್ರತಿಯೊಂದು ರೂಪಾಯಿ ತಾಯ್ನಾಡಿಗೆ ಕಳುಹಿಸಿ ರಾಜ್ಯದ ಆರ್ಥಿಕತೆಗೆ ಸಹಾಯ ಮಾಡುವವರು. ಮುಖ್ಯಮಂತ್ರಿ ಯಡಿಯುರಪ್ಪನವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ನಮ್ಮ ಬೇಡಿಕೆಯನ್ನ ಕಡೆಗಣಿಸದಿರಿ ಎಂದು ಕತಾರ್ ತುಳು ಕೂಟದ ಪೋಷಕರು ಮತ್ತು ಮಾಜಿ ಅಧ್ಯಕ್ಷ ರವಿ ಶೆಟ್ಟಿ ತಿಳಿಸಿದ್ದಾರೆ.

“ಎನ್‍ಆರೈ ಅಪೀಲ್ ಡೆ’ ಅಭಿಯಾನದಲ್ಲಿ ಪಾಲ್ಗೊಳ್ಳುವುದು ವಿಶ್ವದಾದ್ಯಂತ ಪಸರಿಸಿರುವ ಪ್ರತಿಯೊಂದು ಅನಿವಾಸಿ ಕನ್ನಡಪರ ಸಂಘಟನೆಗಳು ಕರ್ತವ್ಯ, ನಿಮ್ಮ ನಿಮ್ಮ ದೇಶದಲ್ಲಿರುವ ಅನಿವಾಸಿ ಕನ್ನಡಿಗರ ಬೇಡಿಕೆಗಳನ್ನು ಜನವರಿ 2ರ ಅಭಿಯಾನದ ಮೂಲಕ ಒಕ್ಕೊರಲಿನಿಂದ ಸರ್ಕಾರದ ಮುಂದಿಟ್ಟು ಸ್ಪಂದಿಸುವರೆಗೂ ಒತ್ತಾಯಿಸೋಣ ಎಂದು ಬಹರೈನ್ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಹೇಳಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ ಅನಿವಾಸಿ ಕನ್ನಡಿಗರ ಅಳಲನ್ನು ಕಡೆಗಾಣಿಸಲಾರರು ಎಂಬ ಭರವಸೆ ಇದೆ. ಸತತವಾಗಿ ಆನಿವಾಸಿಗಳನ್ನು ಮೂಲೆಗುಂಪಾಗಿಸುವ ಕಾರ್ಯ ನಿಲ್ಲಬೇಕು. ಅನಿವಾಸಿ ಕನ್ನಡಿಗರ ಒಗ್ಗಟ್ಟಿನ ಅಭಿಯಾನ ‘ಎನ್‍ಆರೈ ಅಪೀಲ್ ಡೇ’ ಯಶಸ್ವಿಯಾಗಲಿ, ಎಲ್ಲಾ ಬೇಡಿಕೆ ತ್ವರಿತವಾಗಿ ಈಡೇರಲಿ ಎಂದು ಹಾರೈಸುವೆ ಎಂದು ಯುಎಇ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಅನಿವಾಸಿ ಕನ್ನಡಿಗರೆಲ್ಲರೂ ಎರಡನೇ ಬಾರಿಗೆ ಕೈಜೋಡಿಸಿ ಎನ್‍ಆರೈ ಅಪೀಲ್ ಡೇ’ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ, ಕನ್ನಡಿಗಾಸ್ ಫೆಡರೇಷನ್ ನೇತೃತ್ವದ ಈ ಪ್ರಯತ್ನ ಶ್ಲಾಘನೀಯ. ಅನಿವಾಸಿಗಳ ತಾಳ್ಮೆ ಪರೀಕ್ಷೆ ಮಾಡುವುದನ್ನು ನಿಲ್ಲಿಸಿ, ಬಹುಕಾಲದ ಬೇಡಿಕೆಗಳನ್ನು ಈ ಬಾರಿಯಾದರೂ ಈಡೇರಿಸಿ ಎಂದು ದುಬೈ ಕನ್ನಡಗರು ಸಂಘಸ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಹೇಳಿದ್ದಾರೆ.

ಅನಿವಾಸಿ ಭಾರತೀಯ ಸಮಿತಿಗೆ ಸಮರ್ಥ ನೇತೃತ್ವ ಇದ್ದಲ್ಲಿ ಪ್ರಪಂಚದಾದ್ಯಂತ ಕನ್ನಡಿಗರು ಕನ್ನಡದ ಕಂಪನ್ನು ಪಸರಿಸಲು ಸಾಧ್ಯ. ಅನಿವಾಸಿ ಕನ್ನಡಿಗರು ಸಂಘಟನಾತ್ಮಕವಾಗಿ ಬೆಳೆಯಲೂ ಸಾಧ್ಯ. ಹೀಗಾಗಿ ಅನಿವಾಸಿ ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ‘ಎನ್‍ಆರೈ ಅಪೀಲ್ ಡೇ’ ಅಭಿಯಾನದಲ್ಲಿ ಕೈಜೋಡಿಸಿ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರಯತ್ನ ಮುಂದುವರಿಸೋಣ ಎಂದು ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಇ ಮೂಳೂರು ತಿಳಿಸಿದ್ದಾರೆ.

ತಮ್ಮ ಬೇಡಿಕೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರದ ಮುಂದಿಡಲು ಅನಿವಾಸಿ ಕನ್ನಡಿಗರು ಆಶಾಭಾವ ದೊಂದಿಗೆ ಮತ್ತೊಮ್ಮೆ ಸಜ್ಜಾಗಿದ್ದಾರೆ. ಇನ್ನಷ್ಟು ಪರಿಣಾಮಕಾರಿಯಾಗಿ ಎನ್‍ಆರೈ ಅಪೀಲ್ ಡೇ’ ಅಭಿಯಾನದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ, ಜನಪ್ರತಿನಿಧಿಗಳ ಗಮನ ಸೆಳೆಯಲಿದ್ದಾರೆ. ನಾವೂ ಸಕ್ರಿಯವಾಗಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ದುಬೈ ಕನ್ನಡ ಮಿತ್ರರು ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *