ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡುವ ಬಜೆಟ್: ಶಶಿಕಲಾ ಜೊಲ್ಲೆ

Public TV
1 Min Read

ಬೆಂಗಳೂರು: ಇಂದು ಕೇಂದ್ರ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ಆಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸಂತೋಷ ವ್ಯಕ್ತಪಡಿಸಿದರು.

ಕೇಂದ್ರದ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವದಲ್ಲಿ ನಾವುಗಳು ಅಭಿವೃದ್ದಿಯ ಅಮೃತ ಕಾಲಕ್ಕೆ ಸಾಕ್ಷಿಯಾಗಿದ್ದೇವೆ. ಮುಂದಿನ 25 ವರ್ಷಗಳ ಅಭಿವೃದ್ದಿಯ ನೀಲಿನಕ್ಷೆಯನ್ನು ವಿತ್ತ ಸಚಿವರು ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

ಬಜೆಟ್ ನಲ್ಲಿ, ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋಮೀಟರ್‌ಗಳಷ್ಟು ವಿಸ್ತರಿಸುವುದು. ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು. ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು. ಹಾಗೆಯೇ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ತರಗತಿಗೊಂದು ಟಿವಿ ಚಾನೆಲ್ ಪ್ರಸ್ತಾವನೆ, ಪ್ರಾದೇಶಿಕ ಭಾಷೆಗಳೂ ಸೇರಿ 200 ಹೊಸ ಚಾನಲ್ ಆರಂಭಕ್ಕೆ ಪ್ರಸ್ತಾಪ, ಶಿಕ್ಷಕರುಗಳಿಗೆ ಡಿಜಿಟಲ್ ಟೂಲ್ಸ್‍ಗಳ ನೀಡುವಿಕೆ ಹೀಗೆ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

2 ಲಕ್ಷ ಅಂಗನವಾಡಿಗಳ ಉನ್ನತೀಕರಣದಿಂದ ನಮ್ಮ ದೇಶದ ಮಕ್ಕಳಿಗೆ ಅತ್ಯುತ್ತಮ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಲಿದೆ. ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತು. ಮಹಿಳಾ ಮತ್ತು ಮಕ್ಕಳ ಅಭ್ಯುದಯಕ್ಕೂ ಬಜೆಟ್‍ನಲ್ಲಿ ಆದ್ಯತೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

ಭವಿಷ್ಯದಲ್ಲಿ ಭಾರತ ದೇಶವನ್ನು ತಾಂತ್ರಿಕವಾಗಿ ಮತ್ತಷ್ಟು ಮೇಲ್ದರ್ಜೆಗೇರಿಸುವ ಮೂಲಕ ಎಲ್ಲ ವರ್ಗದ ಅಭ್ಯುದಯಕ್ಕೆ ಆದ್ಯತೆ ನೀಡಿರುವ ಬಜೆಟ್ ಇದಾಗಿದೆ ಎಂದು ಅಭಿಪ್ರಾಯಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *