ರಜೆ ಇದ್ದರೂ ಮನೆಗೆ ತೆರಳದೇ ಕರ್ತವ್ಯಕ್ಕೆ ಅಭಿನಂದನ್ ಹಾಜರ್!

Public TV
2 Min Read

ಶ್ರೀನಗರ: ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಅಭಿನಂದನ್ ಅವರಿಗೆ 4 ವಾರಗಳ ಆನಾರೋಗ್ಯದ ರಜೆ ಮೇಲೆ ಮನೆಗೆ ತೆರಳುವಂತೆ ಸಲಹೆ ನೀಡಲಾಗಿತ್ತು. ಆದರೆ ಅಭಿನಂದನ್ ಚೆನ್ನೈನಲ್ಲಿರುವ ಮನೆಗೆ ತೆರಳದೇ ಶ್ರೀನಗರದ ವಾಯುನೆಲೆಗೆ ಮರಳಿದ್ದಾರೆ. ಭಾರತಕ್ಕೆ ಮರಳಿದ ನಂತರ ವೈದ್ಯಕೀಯ ಚಿಕಿತ್ಸೆ, ವಾಯು ಸೇನೆಯ ವಿಚಾರಣೆಯ ನಂತರ ರಜೆಗೆ ತೆರಳುವಂತೆ ಸಲಹೆ ನೀಡಲಾಗಿತ್ತು. ಆದರೆ ಅಭಿನಂದನ್ ಮನೆಗೆ ತೆರಳದೇ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

4 ವಾರಗಳ ಅನಾರೋಗ್ಯದ ರಜೆ ಮುಗಿದ ಬಳಿಕ ವಾಯುಸೇನೆಯ ವೈದ್ಯರು ಅಭಿನಂದನ್ ಅವರ ದೇಹ ಪರೀಕ್ಷೆ ನಡೆಸಲಿದ್ದಾರೆ. ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರು ಮತ್ತೆ ಪೈಲಟ್ ಆಗಬಹುದೋ ಇಲ್ಲವೋ ಎನ್ನುವುದು ನಿರ್ಧಾರವಾಗಲಿದೆ.

ಡಿ ಬ್ರೀಫಿಂಗ್ ವೇಳೆ ಅಭಿನಂದನ್ ಅವರು ಪಾಕ್ ಸೆರೆಯಲ್ಲಿದ್ದ ವೇಳೆ ನಡೆದ ಅನುಭವಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲೂ ಪಾಕಿಸ್ತಾನಿ ಸೇನೆ ನೀಡಿದ ಮಾನಸಿಕ ಹಿಂಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಫೆ.27 ರಂದು ಮಿಗ್ 21 ವಿಮಾನದಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕ ಬಿದ್ದಿದ್ದ ಅಭಿನಂದನ್ 58 ಗಂಟೆಗಳ ಬಳಿಕ ಬಿಡುಗಡೆಯಾಗಿದ್ದರು.

ಫೆ.14 ರಂದು ಪುಲ್ವಾಮಾದಲ್ಲಿ ನಡೆದ ದಾಳಿಯನ್ನು ಜೈಷ್-ಎ-ಮೊಹಮ್ಮದ್ ಸಂಘಟನೆ ಹೊಣೆ ಹೊತ್ತುಕೊಂಡ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪರಿಣಾಮ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಭಾರತ ನೆಲವನ್ನು ಪ್ರವೇಶಿಸಿದ್ದ ಪಾಕ್ ಯುದ್ಧ ವಿಮಾನಗಳು ದಾಳಿ ನಡೆಸಲು ವಿಫಲವಾಗಿ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಎಫ್ 16 ವಿಮಾನವನ್ನು ಚೇಸ್ ಮಾಡುತ್ತಿದ್ದಾಗ ಮಿಗ್ ವಿಮಾನ ಪತನಗೊಂಡು ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ಧುಮುಕಿದ್ದರು.

ಪಾಕ್ ಅಕ್ರಮಿತ ಪ್ರದೇಶದಲ್ಲಿ ಬಿದ್ದ ವೇಳೆ ಅಭಿನಂದನ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪರಿಣಾಮ ಗಾಯಗೊಂಡಿದ್ದರು. ಅದಕ್ಕೂ ಮುನ್ನವೇ ಸೇನೆಗೆ ಸಂಬಂಧಿಸಿದ್ದ ಮುಖ್ಯ ದಾಖಲೆಗಳು ಪಾಕಿಸ್ತಾನದ ಸೇನೆಗೆ ಸಿಗದಂತೆ ಮಾಡಿ ನಾಶ ಪಡಿಸಿದ್ದರು. ಅಲ್ಲದೇ ಕೆಲ ದಾಖಲೆಗಳನ್ನು ತಾವೇ ನುಂಗಿಹಾಕಿದ್ದರು. ಪಾಕಿಸ್ತಾನದಿಂದ ವಾಪಸ್ ಆದ ಬಳಿಕ ಮಾರ್ಚ್ 2 ರಂದು ಅಭಿನಂದನ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಆಗಿದ್ದರು. ಆ ಬಳಿಕ ದೆಹಲಿಯ ಸೇನೆಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *