ಆಂಬಿಡೆಂಟ್ ಪ್ರಕರಣ- ಸಿಸಿಬಿಗೆ ಅಸಲಿಯತ್ತು ಗೊತ್ತಿದ್ರೂ ರೆಡ್ಡಿ ತಲೆಗೆ ಕಟ್ಟಿದ್ಯಾಕೆ..?

Public TV
2 Min Read

ಬೆಂಗಳೂರು: ಭಾರೀ ಸುದ್ದಿಯಾಗಿದ್ದ ಆಂಬಿಡೆಂಟ್ ಪ್ರಕರಣದ ಅಸಲಿಯತ್ತು ಗೊತ್ತಿದ್ದರೂ ಸಿಸಿಬಿ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಯವರ ತಲೆಗೆ ಕಟ್ಟಿದ್ಯಾಕೆ ಅನ್ನೋ ಪ್ರಶ್ನೆಯೊಂದು ಇದೀಗ ಮೂಡಿದೆ.

ಇಡೀ ಪ್ರಕರಣದ ವಿವರಣೆಯನ್ನು ಆರೋಪಿ ಶಾರೀಖ್ ಸಿಸಿಬಿ ಮುಂದೆ ಹೇಳಿದ್ದಾನೆ. ಹೀಗಾಗಿ ಆಂಬಿಡೆಂಟ್ ಪ್ರಕರಣದಲ್ಲಿ ಇಡಿ ಅಧಿಕಾರಿಗೆ ಡೀಲ್ ಮಾಡಿದ್ರಾ ಎಂಬ ಅನುಮಾನ ಕಾಡುತ್ತಿದೆ.

ಶಾರೀಖ್ ಹೇಳಿದ್ದೇನು..?
ಜನಾರ್ದನ ರೆಡ್ಡಿ ಡೀಲ್ ಮಾಡ್ತೀನಿ ಅಂತ ಹೋಟೆಲ್ ಅಲ್ಲಿ ಹಣ ಪಡೆದು ಕೈಕಟ್ಟಿ ಕುಳಿತು ಬಿಟ್ಟರು. ಆದ್ರೆ, ಆಂಬಿಡೆಂಟ್ ಮಾಲೀಕ ಫರೀದ್, ಜನಾರ್ದನ ರೆಡ್ಡಿಯನ್ನು ಬೆದರಿಸಿ ಕೇಳೋಕೆ ಆಗ್ತಾ ಇರ್ಲಿಲ್ಲ. ಆದ್ದರಿಂದ ಡೀಲ್‍ನ ಮತ್ತೊಂದು ಸುಪಾರಿಯನ್ನು ಅಶ್ರಫ್ ಆಲಿ ಪಡೆದಿದ್ದನು ಎಂದಿದ್ದಾನೆ.

ಬೆಂಗಳೂರಿನ ಅಶ್ರಫ್ ಆಲಿ ಡೀಲ್ ಪಡೆದು ಇಡಿ ಅಧಿಕಾರಿಗಳೊಂದಿಗೆ ವ್ಯವಹಾರ ಕುದುರಿಸಿದ್ದರು. ವುಡ್ ಲ್ಯಾಂಡ್ಸ್ ಹೋಟೆಲ್‍ನಲ್ಲಿ ಅಶ್ರಫ್ ಅಲಿ ಮತ್ತು ಶಾರೀಖ್, ನಿವೃತ್ತ ಇಡಿ ಅಧಿಕಾರಿ ಗಂಗಾಧರಯ್ಯ ಅವರನ್ನು ಭೇಟಿ ಮಾಡಿ ಡೀಲ್ ಮಾಡಿದ್ದರು. ಹೀಗಾಗಿ ನಿವೃತ್ತ ಅಧಿಕಾರಿಯು ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಇಡಿ ಅಧಿಕಾರಿ ನೀರಜ್ ಜೊತೆ ಸಂಪರ್ಕ ಹೊಂದಿದ್ದರು. ಹಾಗೆಯೇ ನೀರಜ್ ನ ಭೇಟಿ ಮಾಡಿ ಫರೀದ್ ಕೇಸ್ ನಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡು ಒಂದೂವರೆ ಕೋಟಿ ಬೇಡಿಕೆಯಿಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಅಶ್ರಫ್ ಅಲಿ ಮತ್ತು ಶಾರೀಖ್ 75 ಲಕ್ಷ ಹಣದೊಂದಿಗೆ ನೀರಜ್ ನ ಭೇಟಿ ಮಾಡಿದ್ದರು. ಈ ವೇಳೆ ಒಂದೂವರೆ ಕೋಟಿ ಡೀಲ್ ಅಲ್ಲಿ 75 ಲಕ್ಷ ಮಾತ್ರ ತಂದಿದ್ದಕ್ಕೆ ನೀರಜ್ ಕುಮಾರ್ ಗರಂ ಆಗಿದ್ದರು. ಹಣ ಪೂರ್ತಿ ಕೊಡದೆ ಯಾವುದೇ ಕೆಲಸ ಮಾಡಿ ಕೊಡೋದಿಲ್ಲ ಎಂದು ಬೆದರಿಕೆ ಹಾಕಿದ್ದರು. ಇಡಿ ಅಧಿಕಾರಿ ಮಾತಿಗೆ ಬೆದರಿದ ಅಶ್ರಫ್ ಅಲಿ ಮತ್ತು ಶಾರೀಖ್ ಮತ್ತೆ ಮಲ್ಲೇಶ್ವರಂನ ನಟರಾಜ್ ಎಂಬವರಿಂದ 75 ಲಕ್ಷ ಹಣ ಪಡೆದಿದ್ದರು.

ಬಳಿಕ ಸನ್ಮಾನ್ ಹೋಟೆಲ್ ಬಳಿ ನೀರಜ್ ಕುಮಾರ್ ಅವರಿಗೆ ಒಂದೂವರೆ ಕೋಟಿ ಹಣ ಸಂದಾಯ ಮಾಡಿದ್ದರು ಅಂತ ಶಾರೀಖ್ ಸಿಸಿಬಿ ಪೊಲೀಸರ ಮುಂದೆ ಇಡಿ ಡೀಲ್ ಬಾಯಿಬಿಟ್ಟಿದ್ದಾನೆ. ಹಣ ಪಡೆದ ನೀರಜ್ ಕುಮಾರ್ ಪ್ರಸ್ತುತ ಗೌಹಾಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ  ಅಂತ  ಶಾರೀಖ್ ತಿಳಿಸಿರುವುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *