ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

Public TV
1 Min Read

ಲಕ್ನೋ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿ ಏಕಾಂಗಿ ಸ್ಪರ್ಧಿಸಲಿದ್ದೇವೆ ಎಂದು ಹೇಳಿದ ಬೆನ್ನಲ್ಲೇ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ನೊಂದಿಗೆ ಮೈತ್ರಿ ರಚಿಸುವ ಬಗ್ಗೆ ಹಿಂದೆ ಸರಿದಿದ್ದಾರೆ.

ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷ ನಮ್ಮನ್ನು ಈಗಾಗಲೇ ಹೆಚ್ಚು ಸಮಯ ಕಾಯುವಂತೆ ಮಾಡಿದೆ. ಅದ್ದರಿಂದ ಮುಂಬರುವ ಮಧ್ಯಪ್ರದೇಶ ಚುನಾವಣೆಗೆ ನಾವು ಬಿಎಸ್‍ಪಿ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಖಿಲೇಶ್ ಯಾದವ್ ಅವರ ಈ ತೀರ್ಮಾನ ಮಹಾಮೈತ್ರಿ ರಚಿಸಲು ಸಿದ್ಧತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಭಾರೀ ಹಿನ್ನಡೆ ಉಂಟು ಮಾಡಲಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

ಯಾದವ್ ಅವರ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವೂ ಇದ್ದು ಮಾಯಾವತಿ ನೇತೃತ್ವದ ಬಿಎಸ್‍ಪಿ ಪಕ್ಷದೊಂದಿಗೆ ಮೈತ್ರಿ ರಾಜಕಾರಣಕ್ಕೆ ಮುಂದಾದರೆ ಜಾತಿ ರಾಜಕೀಯ ಲೆಕ್ಕಚಾರದಲ್ಲಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಲಭಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಳೆದ 15 ವರ್ಷಗಳಿಂದ ಮುಂದಾಳತ್ವದಲ್ಲಿರುವ ಬಿಜೆಪಿ ವಿರುದ್ಧ ಗೆಲುವು ನಿಶ್ಚಿತವಾಗಲಿದೆ ಎಂಬ ಲೆಕ್ಕಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಯಾವತಿ ಅವರು, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಯಾವುದೇ ಕಾರಣಕ್ಕೂ ಬಿಎಸ್‍ಪಿ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯವಾಗಿ ಬಿಎಸ್‍ಪಿ ಪಕ್ಷವನ್ನು ಮುಗಿಸಲು ಪ್ರಯತ್ನ ನಡೆಸಿದೆ. ಪಕ್ಷದ ಬೆಳವಣಿಗೆ ಉದ್ದೇಶದಿಂದ ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *