ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಾಹನಗಳಿಗೆ ಬೆಂಕಿ! ಪರಿಸ್ಥಿತಿ ಉದ್ವಿಗ್ನ

Public TV
1 Min Read

ಲಕ್ನೋ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಲಯ ಖಾಲಿ ಮಾಡುವಂತೆ ಹೇಳಿದ್ದಕ್ಕೆ, ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಹಾಬಾದ್‍ನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಿದೆ.

sಅಲಹಾಬಾದ್ ವಿಶ್ವವಿದ್ಯಾನಿಲಯದ ಅಧಿಕಾರಿ ರಾಮ್ ಸೇವಕ್ ಸುಬೇರವರು ಹಾಸ್ಟೆಲ್‍ನ ವಿದ್ಯಾರ್ಥಿಗಳಿಗೆ ತಮ್ಮ ಕೊಠಡಿಗಳನ್ನು ಖಾಲಿ ಮಾಡುವಂತೆ ಸೋಮವಾರ ತಿಳಿಸಿದ್ದರು. ಒಂದು ವಾರದೊಳಗೆ ತಮ್ಮ ಎಲ್ಲಾ ವಸ್ತುಗಳ ಸಮೇತ ಖಾಲಿ ಮಾಡಬೇಕು, ಇಲ್ಲವಾದಲ್ಲಿ ಪೊಲೀಸರ ಸಹಾಯದಿಂದ ಜೂನ್ 12ರಂದು ಹೊರಹಾಕಲಾಗುತ್ತದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಹಾಸ್ಟೆಲ್‍ನ ವಿದ್ಯಾರ್ಥಿಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳವಾರ ಮಧ್ಯಾಹ್ನ ಯೂನಿಯನ್ ಆವರಣದ ಬಳಿ ವಿಶ್ವವಿದ್ಯಾನಿಲಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾರೂಪಕ್ಕೆ ತೆರಳಿದೆ. ಆವರಣದಿಂದ ಹೊರಗಡೆ ಬಂದ ಪ್ರತಿಭಟನಾಕಾರರು ಏಕಾಏಕಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಶಸ್ತ್ರ ಮೀಸಲು ಪಡೆ ತಂಡ ಮತ್ತು ಹೆಚ್ಚಿನ ಸಂಖ್ಯೆಯ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳಕ್ಕೆ ಬಂದ ಇವರು ಪ್ರತಿಭಟನಾಕಾರನ್ನು ಬೆನ್ನಟ್ಟಿ ಚದುರಿಹೋಗುವಂತೆ ಮಾಡಿದ್ದಾರೆ. ಅಲ್ಲದೇ ಹಾಸ್ಟೆಲ್‍ನಲ್ಲಿ ಹುಡುಕಾಟ ಮುಂದುವರಿಸಿದ್ದಾರೆ. ಪ್ರತಿಭಟನೆ ನಡೆಸಿದ ಎಲ್ಲಾ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅಲಹಾಬಾದ್ ಎಸ್ಪಿ ಬ್ರಿಜೇಶ್ ಶ್ರೀವತ್ಸವ್‍ರವರು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಶೀಘ್ರವೇ ಬಂಧಿಸಲಾಗುವುದೆಂದು ತಿಳಿಸಿದ್ದಾರೆ. ಈ ಗಲಭೆಯಲ್ಲಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಸಂಪೂರ್ಣ ಜಖಂಗೊಂಡಿದ್ದು, ಪೊಲೀಸ್ ಜೀಪ್ ಮತ್ತು ಬೈಕ್‍ಗಳು ಸುಟ್ಟು ಕರಕಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ವಿಶ್ವವಿದ್ಯಾನಿಲಯವು ಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ಹಲವು ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಹೊರಹಾಕಿತ್ತು. ಈ ವೇಳೆ ವಿದ್ಯಾರ್ಥಿಗಳು ಹಾಸ್ಟೆಲ್ ಸೇರಿದ ವಸ್ತುಗಳಿಗೆ ಹಾನಿಮಾಡಿ ಹೋಗಿದ್ದರು. ಈ ವರ್ಷ ಪುನಃ ಅದೇ ರೀತಿ ತೊಂದರೆ ಆದರೆ ಕ್ರಮ ಕೈಗೊಳ್ಳಲಾಗುತ್ತದೆ ವಿವಿ ತಿಳಿಸಿತ್ತು ಎಂದು ತಿಳಿದು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *