100 ಅಡಿ ಆಳಕ್ಕೆ ಬಸ್ ಉರುಳಿ ಬಿದ್ದು 24 ಯಾತ್ರಿಕರ ದುರ್ಮರಣ

Public TV
1 Min Read

ಡೆಹ್ರಾಡೂನ್: ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸೊಂದು 100 ಮೀಟರ್ ಆಳಕ್ಕೆ ಉರುಳಿ ಬಿದ್ದ ಪರಿಣಾಮ 24 ಮಂದಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಉತ್ತರಾಖಂಡ್ ನ ಉತ್ತರಕಾಶಿಯ ಗಂಗೋತ್ರಿಯಿಂದ ಯಾತ್ರಿಕರಿದ್ದ ಬಸ್ ಹಿಂದಿರುಗುತ್ತಿದ್ದ ವೇಳೆ ನಲುಪಾಣಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಭಾಗೀರಥಿ ನದಿಗೆ ಉರುಳಿ ಬಿದ್ದಿದೆ.

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಅಂತಾ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಮಂಗಳವಾರ ಸಂಜೆ ಸುಮಾರು 6 ಗಂಟೆ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಬಸ್‍ನಲ್ಲಿದ್ದವರು ಮಧ್ಯಪ್ರದೇಶ ಮೂಲದವರಾಗಿದ್ದು, ಗಂಗೋತ್ರಿಯಿಂದ ರಿಷಿಕೇಶ್‍ಗೆ ಬರುವಾಗ 100 ಅಡಿ ಆಳದ ಕಂದಕಕ್ಕೆ ಬಿದ್ದು ಅವಘಢ ಸಂಭವಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಮೃತರ ಕುಟುಂಬದವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಐಟಿಬಿಪಿ, ಎಸ್‍ಡಿಆರ್‍ಎಫ್ ಪಡೆ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಪರ್ವತ ತುಂಬಾ ಕಡಿದಾದುದ್ದರಿಂದ ಮತ್ತಷ್ಟು ವಿಳಂಬವಾಗಿ ಬೆಳಗ್ಗೆವರೆಗೂ ಕಾರ್ಯಾಚರಣೆ ನಡೆದಿದೆ.

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕೂಡ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಪ್ರತೀ ಕುಟುಂಬಕ್ಕೂ 1 ಲಕ್ಷ ಹಾಗೂ ಗಯಾಳುಗಳಿಗೆ 50,000 ಪರಿಹಾರ ಘೋಷಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *