ಬಾಹ್ಯಾಕಾಶದಲ್ಲಿ ಮೊಳಕೆ ಒಡೆಯಲಿವೆ ಧಾರವಾಡ ಕೃಷಿ ವಿವಿಯ ಮೆಂತೆ, ಹೆಸರು ಕಾಳು!

Public TV
1 Min Read

– ಭೂಮಿಗೆ ಮರಳಿದ  ಬಳಿಕ ಸಂಶೋಧನೆ

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೆಸರು ಮತ್ತು ಮೆಂತೆ ಬೀಜಗಳನ್ನು ಆಕ್ಸಿಯಂ-4 ಬಾಹ್ಯಾಕಾಶ ಯೋಜನೆಗಾಗಿ (Axiom Mission 4) ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ರವಾನಿಸಲಾಗಿದೆ.

ಬಾಹ್ಯಾಕಾಶದಲ್ಲಿ ಸಲಾಡ್ ಬೀಜಗಳ ಮೊಳಕೆ ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ ರವಾನಿಸಲಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ (Dharwad Agricultural University) ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ‌ನೀಡಿದ್ದಾರೆ. ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಿದೆ – ಅಂತರಿಕ್ಷ ಪ್ರಯಾಣದ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

ಏನಿದು ಸಂಶೋಧನೆ?
ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಈ ಬೀಜಗಳಿಗೆ ನೀರು ಹಾಕುತ್ತಾರೆ. ಎರಡರಿಂದ ನಾಲ್ಕು ದಿನಗಳಲ್ಲಿ ಇವು ಮೊಳಕೆಯೊಡೆಯುತ್ತವೆ. ಮೊಳಕೆ ಕಾಳುಗಳನ್ನು ಬಾಹ್ಯಾಕಾಶದಲ್ಲಿ ಶೈತ್ಯ ಘಟಕದಲ್ಲಿ ಇಟ್ಟು ನಂತರ ಭೂಮಿಗೆ ತರಲಾಗುತ್ತದೆ.

ಮೊಳಕೆ ಕಾಳುಗಳನ್ನು ವಾಪಸ್ ಭೂಮಿಗೆ ತಂದ ನಂತರ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲಾಗುತ್ತದೆ. ಮೊಳಕೆ ಪ್ರಮಾಣ, ಅವುಗಳ ಪೋಷಕಾಂಶ ಗುಣಮಟ್ಟ, ಫೈಟೋ-ಹಾರ್ಮೋನ್‌ಗಳ ಚಟುವಟಿಕೆ ಹಾಗೂ ಜೀವಸೂತ್ರ (ಟ್ರಾನ್ಸ್ ಕ್ರಿಪ್ಲೋಮ್) ಪರೀಕ್ಷಿಸಿ ವಿಶ್ಲೇಷಿಸಲಾಗುವುದು, ಅಲ್ಲದೇ ಮೊಳಕೆಯ ಮೇಲೆ ಮೈಕ್ರೋಬಿಯಲ್ ಬೆಳವಣಿಗೆ ಅಧ್ಯಯನ ಮಾಡಲಾಗುತ್ತದೆ.

ಈ ಸಂಶೋಧನಯು ಭವಿಷ್ಯದಲ್ಲಿ ಅಂತರಿಕ್ಷ-ಯಾನದಲ್ಲಿ ಭಾರತೀಯರ ಆಹಾರದ ಭಾಗವಾಗಬಲ್ಲ ಆರೋಗ್ಯಕರ ಸಲಾಡ್ ತರಕಾರಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮೊಳಕೆಯೊಡೆಯುವ ಬೀಜಗಳನ್ನು ಬೆಳೆಸಲು ಕೇವಲ ಕಂಟೇನರ್, ನೀರು ಇದ್ದರೆ ಸಾಕು. ಮೊಳಕೆ ಕಾಳುಗಳು ಪೋಷಕಾಂಶ ಭರಿತವಾಗಿರುತ್ತವೆ.

ಗಗನಯಾನ ಮಿಷನ್ ಭವಿಷ್ಯದ ಯಾತ್ರಿಕರ ಆಹಾರ ಗಮನದಲ್ಲಿಟ್ಟುಕೊಂಡು ಈ ಸಂಶೋಧನೆಗೆ ಹೆಸರು, ಮೆಂತೆ ಬೀಜಗಳ ಮೊಳಕೆ ಅಧ್ಯಯನ ಆಯ್ಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಜೈ ಹಿಂದ್‌.. ಜೈ ಭಾರತ್..‌: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ

ಮೆಂತೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಎಲುಬಿನ ಆರೋಗ್ಯ ಉತ್ತಮಗೊಳಿಸುತ್ತದೆ. ಮೂತ್ರಕೋಶದಲ್ಲಿ ಕಲ್ಲು ರಚನೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗಗನಯಾತ್ರಿಗಳ ಆರೋಗ್ಯದ ದೃಷ್ಟಿಯಿಂದ ಸಂಶೋಧನೆಗೆ ಈ ಬೀಜಗಳನ್ನು ಅಯ್ಕೆ ಮಾಡಲಾಗಿದೆ ಎಂದು ಪ್ರೊ.ಪಿ.ಎಲ್.ಪಾಟೀಲ ವಿವರಿಸಿದರು.

Share This Article