ರೈತರ ಮೇಲೆ ಮಾಜಿ ಸಚಿವ ಪರಮೇಶ್ವರ ನಾಯ್ಕ ಪುತ್ರನಿಂದ ಹಲ್ಲೆ

Public TV
1 Min Read

ದಾವಣಗೆರೆ: ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಪುತ್ರ ಹಾಗೂ ಬೆಂಬಲಿಗರು ರೈತರ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಹೊರವಲಯದಲ್ಲಿ ನಡೆದಿದೆ.

ಕಲ್ಲು ಗಣಿಗಾರಿಕೆ ವಿಚಾರವಾಗಿ ಪ್ರಶ್ನಿಸಿದ ಹರಪನಹಳ್ಳಿಯ ರೈತರ ಮೇಲೆ ಮಾಜಿ ಸಚಿವರ ಪುತ್ರ ಭರತ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ಗಣಿಗಾರಿಕೆಯಿಂದ ತಮ್ಮ ಜಮೀನಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಧೂಳಿನಿಂದ ಭಾರೀ ಸಮಸ್ಯೆಯಾಗಿದೆ ಎಂದು ರೈತರು ಆರೋಪಿಸಿದ್ದರು. ಹೀಗಾಗಿ ರೈತರು ಉಪವಿಭಾಗಾಧಿಕಾರಿಗಳನ್ನು ಪರಿಶೀಲನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇದೇ ಮಾರ್ಗದಲ್ಲಿ ಪಿ.ಟಿ. ಪರಮೇಶ್ವರ ನಾಯ್ಕ್ ಕಾರಿನಲ್ಲಿ ಹೋಗುವಾಗ ಧೂಳು ಬಂದ ಕಾರಣ ರೈತರು ಆಕ್ಷೇಪಿಸಿದರು.

ರೈತರ ಆಕ್ಷೇಪಣೆಯಿಂದ ಕೋಪಗೊಂಡ ಪರಮೇಶ್ವರ ನಾಯ್ಕ್ ಅವರ ಪುತ್ರ ಹಾಗೂ ಬೆಂಬಲಿಗರು ಕಾರಿನಿಂದ ಇಳಿದು ಬಂದು ಹಲ್ಲೆ ಮಾಡಿದ್ದಾರೆ. ತಕ್ಷಣವೇ ಕಾರಿನಿಂದ ಇಳಿದು ಬಂದ ಪರಮೇಶ್ಚರ ನಾಯ್ಕ ಗಲಾಟೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರೈತರು ಹರಪನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *