ಪ್ರೇಕ್ಷಣೀಯ ತಾಣವಾಗಿ ಬಾಣಂದೂರಿನ ಮರುವಿನ್ಯಾಸಕ್ಕೆ ಡಾ.ಅಶ್ವತ್ಥನಾರಾಯಣ ಸೂಚನೆ

Public TV
1 Min Read

ಬೆಂಗಳೂರು: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು, ಬಿಡದಿ ಹೋಬಳಿಯ ಬಾಣಂದೂರನ್ನು ಪ್ರೇಕ್ಷಣೀಯ ತಾಣವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದ್ದು. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಮರುವಿನ್ಯಾಸಗೊಳಿಸುವಂತೆ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

ಬಾಣಂದೂರನ್ನು ಸಾಂಸ್ಕೃತಿಕ ಹಾಗೂ ಪಾರಂಪರಿಕ ತಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆ ಮುಖ್ಯಸ್ಥರ ಜತೆ ಸೋಮವಾರ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸುದೀರ್ಘ ಚರ್ಚೆ ನಡೆಸಿದರು. ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪಾಲ್ಗೊಂಡಿದ್ದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರ ಅಭಿವೃದ್ಧಿಪಡಿಸುವ ಕುರಿತು ಮತ್ತು ವೀರಾಪುರದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ, ಮ್ಯೂಸಿಯಂ ನಿರ್ಮಾಣ ಹಾಗೂ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಬಾಣಂದೂರಿನ ಪಾರಂಪರಿಕ ಕೇಂದ್ರದ ಪರಿಕಲ್ಪನೆ, ವಿನ್ಯಾಸ ಮಾಡುತ್ತಿರುವ ಆರ್.ಆರ್ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆಯ ವರದಿ ಪರಿಶೀಲಿಸಿದ ಡಾ. ಅಶ್ವತ್ಥನಾರಾಯಣ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿ ಹಾಗೂ ಸಾರ್ವಜನಿಕರ ಜತೆ ಈ ಸಂಬಂಧ ಸಮಾಲೋಚನೆ ನಡೆಸಿ ಸೂಕ್ತ ಬದಲಾವಣೆ ಮಾಡಿಕೊಳ್ಳಲು ಸೂಚಿಸಿದರು.

ರಾಜ್ಯದ ಎಲ್ಲ ಭಾಗಗಳ ಜನರು ಭೇಟಿ ನೀಡುವ ತಾಣವಾಗಿ ಬಾಣಂದೂರು ಅಭಿವೃದ್ಧಿ ಆಗಬೇಕು. ಗ್ರಂಥಾಲಯ, ಸಭಾಂಗಣ, ಮ್ಯೂಸಿಯಂ ಸೇರಿದಂತೆ ಹಲವು ಆಕರ್ಷಣೆಗಳು ಅಲ್ಲಿರಬೇಕು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪೂರ್ವಜರ ಮನೆಯ ಮೂಲ ಸ್ವರೂಪ ಮರುಸೃಷ್ಟಿ ಮುಂತಾದ ಯೋಜನೆಗಳ ಮೂಲಕ ಬಾಣಂದೂರನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲು ಆರ್.ಆರ್ ಇನ್ಫ್ರಾಸ್ಟ್ರಕ್ಚರ್‍ನ ಮುಖ್ಯಸ್ಥರಿಗೆ ಸಚಿವರು ಸಲಹೆ ನೀಡಿದರು.

ಮಠದ ಜಾಗದಲ್ಲಿ ನಿರ್ಮಾಣವಾಗಲಿರುವ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರಕ್ಕೆ ನಿಗದಿಪಡಿಸಿರುವ 25 ಕೋಟಿ ರೂಪಾಯಿಯನ್ನು ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ಊರಿನಲ್ಲಿ ಇತರ ಮೂಲಸೌಕರ್ಯ ಕಲ್ಪಿಸುವ ಕಾರ್ಯಕ್ರಮಗಳಿಗೆ ಇಲಾಖೆಗಳ ಹಣ ಬಳಸಿಕೊಳ್ಳಬಹುದು ಎಂದು ಡಾ. ಅಶ್ವತ್ಥನಾರಾಯಣ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಆದಿಚುಂಚನಗಿರಿಯ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ, ರಾಮನಗರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಮಾಗಡಿ ಶಾಸಕ ಎ.ಮಂಜುನಾಥ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *