ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ: ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ

Public TV
1 Min Read

ಬೆಂಗಳೂರು: ಟಿಪ್ಪು ಜಯಂತಿಯ ವಿಚಾರದಲ್ಲಿ ಬಿಜೆಪಿ ಪಕ್ಷದಲ್ಲೇ ಭಿನ್ನಮತ ಕೇಳಿ ಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿಯ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡ್ತೀವಿ ಎಂದು ಬಿಜೆಪಿ ಸಂಸದ ಬಚ್ಚೇಗೌಡ ಅವರ ಮಗ ಮತ್ತು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶರತ್ ಬಚ್ಚೇಗೌಡ ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ಬಿಜೆಪಿ ಸರ್ಕಾರ ಮಾಡಬಾರದು ಎಂದು ತಡೆ ಹಿಡಿದಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಇಂದು ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್ ಬಚ್ಚೇಗೌಡ ನಾವು ಈ ಬಾರಿ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ.

ಹಲವು ಬಾರಿ ನನಗೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸಾಕಷ್ಟು ಜನ ಹೇಳಿದ್ದರು. ಆದರೆ ಈ ಬಾರಿಯ ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಮಾಡುತ್ತೇವೆ. ನಮ್ಮೂರಿನ ಪಕ್ಕದಲ್ಲಿರುವ ತಮ್ಮರಸನಹಳ್ಳಿಯಲ್ಲಿ ಈ ಬಾರಿ ಟಿಪ್ಪು ಜಯಂತಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ನೀಡುತ್ತಿದ್ದಂತೆ ಮುಸ್ಲಿಂ ಯುಕನೋರ್ವ ಶರತ್ ಅವರ ಮೇಲೆ ಹಣವನ್ನು ಸುರಿದಿದ್ದಾನೆ.

ಈಗ ಶರತ್ ಬಚ್ಚೇಗೌಡ ಅವರ ಹೇಳಿಕೆ ಸಾಕಷ್ಟು ಸುದ್ದಿಯಾಗಿದ್ದು, ಟಿಪ್ಪು ಜಯಂತಿ ಮಾಡುತ್ತೇವೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *