ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ

Public TV
2 Min Read

ಬೆಂಗಳೂರು: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಲಾಕ್‍ಡೌನ್ ಅವದಿ ಮುಂದುವರೆಯುವುದಿಲ್ಲ. ಅದೂ ನಾವು ಅದನ್ನು ಹೇಗೆ ಕಟ್ಟುನಿಟ್ಟಿನ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಾಡಿನ ಜನತೆ ಲಾಕ್‍ಡೌನ್ ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೊನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಸಿಎಂ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ವಿಧಿಸಿದ್ದಾರೆ. ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯಲ್ಲಿ ಕ್ಷಮೆಯನ್ನು ಪ್ರಧಾನಿಗಳು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ. ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ ಎಂದು ಹೇಳಿದ್ದಾರೆ.

ನಾವು ಪ್ರಧಾನಿಗಳ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸಬೇಕಿದೆ. ಜಾಗೃತ ನಾಗರಿಕರಾದ ನಾವೆಲ್ಲ ಪ್ರಧಾನಮಂತ್ರಿಯವರ ಈ ದಿಟ್ಟ ನಿಲುವನ್ನು ಮತ್ತು ನಿರ್ಧಾರವನ್ನು ಬೆಂಬಲಿಸಬೇಕಾಗಿದೆ. ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿ ಏನೆಂದರೆ, ಎಲ್ಲರೂ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‍ಡೌನ್ ಪಾಲಿಸಿ ಎಂದು ಸಿಎಂ ಕೇಳಿಕೊಂಡಿದ್ದಾರೆ.

ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ. ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಿ. ಇದನ್ನು ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿ. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಮನೆಯಲ್ಲೇ ಕುಳಿತು ಪುಸ್ತಕಗಳನ್ನು ಓದಿರಿ. ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಸಿಎಂ ಜನರಿಗೆ ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕೊರೊನಾ ವೈರಸ್ ಪೀಡಿತ ನೂರಾರು ಜನರ ಪ್ರಾಣ ಉಳಿಸಲು ಸತತವಾಗಿ ಕೆಲಸದಲ್ಲಿ ತೊಡಗಿರುವ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಮತ್ತು ನಾಗರಿಕ ಸೇವೆಯಲ್ಲಿ ತೊಡಗಿರುವ ಸಾವಿರಾರು ಕಾರ್ಯಕರ್ತರಿಗೆ ನಾವುಗಳು ನೈತಿಕ ಬೆಂಬಲ ವ್ಯಕ್ತಪಡಿಸೋಣ. ಅವರಿಗೆ ಮನೋಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಲಾಕ್‍ಡೌನ್ ಬೇಗ ಮುಗಿಯಲು ಕಟ್ಟುನಿಟ್ಟಿನ ಪಾಲನೆ ಅಗತ್ಯ. ನಿಮ್ಮ ಆಹಾರ, ಊಟಕ್ಕೆ ತೊಂದೆರೆಯಾಗದಂತೆ ಸರ್ಕಾರ ಎಚ್ಚರವಹಿಸಿದೆ ಎಂದು ತಿಳಿಸಿದರು.

ಯಾವುದೇ ಸುಳ್ಳು ಸುದ್ದಿಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬೇಡಿ. ನೀವು ಎಷ್ಟು ಕಟ್ಟುನಿಟ್ಟಿನಿಂದ ಮನೆಯಲ್ಲಿ ಇರುವುದನ್ನು ಪಾಲಿಸುತ್ತೀರೋ ಅಷ್ಟು ಬೇಗ ಅಂದರೆ ಏಪ್ರಿಲ್-14 ಕ್ಕೆ ಲಾಕ್‍ಡೌನ್ ಮುಗಿಯುವುದು. ಲಾಕ್‍ಡೌನ್ ಪರಿಸ್ಥಿತಿ ನಿಮ್ಮ ಕಫ್ರ್ಯೂ ಪಾಲನೆ ಮೇಲೆ ಅವಲಂಬಿತವಾಗಿದೆ. ಇನ್ನೊಮ್ಮೆ ನಿಮ್ಮೆಲ್ಲರಲ್ಲಿ ಮನವಿ ಏನೆಂದರೆ ಕಟ್ಟುನಿಟ್ಟಾಗಿ ಕರ್ಫ್ಯೂ ಪಾಲಿಸಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *