ಮೊದಲ ಕನ್ನಡ ವಾಕ್ಚಿತ್ರದಲ್ಲಿ ನಟಿಸಿದ್ದ ಎಸ್. ಕೆ. ಪದ್ಮಾದೇವಿ ಇನ್ನಿಲ್ಲ

Public TV
1 Min Read

ಬೆಂಗಳೂರು: ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ `ಭಕ್ತಧ್ರುವ’ (1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಹಿರಿಯ ನಟಿ ಎಸ್. ಕೆ. ಪದ್ಮಾದೇವಿ ವಿಧಿವಶರಾಗಿದ್ದಾರೆ.

ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರು ಹುಟ್ಟೂರು. ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ ಪ್ರವೇಶಿಸಿದ್ದರು. ಹೆಚ್.ಎಲ್.ಎನ್.ಸಿಂಹ ಅವರ ನಾಟಕ ಕಂಪನಿಯಲ್ಲಿ ಅಭಿನಯಿಸುತ್ತಾ, ಸ್ವಂತ ನಾಟಕ ಸಂಸ್ಥೆಯನ್ನು ಕಟ್ಟಿದ್ದರು. `ಸಂಸಾರ ನೌಕ’ (1936) ಚಿತ್ರ ಪದ್ಮಾದೇವಿ ಅವರಿಗೆ ಹೆಸರು ತಂದು ಕೊಟ್ಟಿತ್ತು. ಈ ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಹಾಡಿದ್ದರು. ಒಂದು ಹಾಡನ್ನು ಸ್ವತಃ ಇವರೇ ವೀಣೆ ನುಡಿಸಿಕೊಂಡು ಹಾಡಿದ್ದರು.

`ವಸಂತಸೇನ’, `ಭಕ್ತ ಸುಧಾಮ’, `ಜಾತಕ ಫಲ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. `ಭಕ್ತಸುಧಾಮ’ದಲ್ಲಿ ಮಧುಗಿರಿ ಮೀನಾಕ್ಷಿ ಎಂದು ಹೆಸರು ಬದಲಾಯಿಸಿಕೊಂಡರು. ಎರಡು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ. ರಂಗಭೂಮಿಯಲ್ಲೇ ತೊಡಗಿಕೊಂಡು ಬಹಳ ಕಾಲ ಚಲನಚಿತ್ರದ ಅಭಿನಯ ನಿಲ್ಲಿಸಿದರು. `ಮುಕ್ತಿ’, `ಅಮರ ಮಧುರ ಪ್ರೇಮ’, `ಸಂಕ್ರಾಂತಿ’ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ

ಗಿರೀಶ್ ಕಾಸರವಳ್ಳಿ ನಿರ್ದೇಶನದ `ಕ್ರೌರ್ಯ’ ಚಿತ್ರದ ರೇಣುಕಮ್ಮ ಮುರಗೊಡು ಅವರ ಪಾತ್ರಕ್ಕೆ ಕಂಠದಾನ ಮಾಡಿದರು. ಮಗ ನಂದಕಿಶೋರ್ ನಿರ್ದೇಶಿಸಿದ `ಕಿರಣ’ ಟೆಲಿ ಫಿಲಂನಲ್ಲಿ ಅಜ್ಜಿ ಪಾತ್ರ ಮಾಡಿದರು. ಆಕಾಶವಾಣಿಯಲ್ಲಿ ಅನೇಕ ವರ್ಷಗಳು ಕೆಲಸ ಮಾಡಿದ ಪದ್ಮಾದೇವಿಯವರು ಮಾಧ್ಯಮದಲ್ಲಿಯೂ ಹೆಸರು ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *