ರಸ್ತೆ ತಿರುವಿನಲ್ಲಿ ಅತಿ ವೇಗದ ಚಾಲನೆ- ಖಾಸಗಿ ಬಸ್‍ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ

Public TV
1 Min Read

– ಇನ್ನೋರ್ವ ಬೈಕ್ ಸವಾರ ಗಂಭೀರ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಧುಗಿರಿ ಮಾರ್ಗದ ಹೊಸಕೋಟೆ ಕ್ರಾಸ್ ಬಳಿ ನಡೆದಿದೆ.

ಮೃತರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಿಪ್ಪಗೊಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 24 ವರ್ಷದ ಕೆಪಿಟಿಸಿಎಲ್ ಲೈನ್ ಮೆನ್ ಸುನೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಬೈಕ್ ಸವಾರ ವಿನಯ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಬೈಕ್ ನಲ್ಲಿ ಮೂವರು ಪ್ರಯಾಣ ಮಾಡುತ್ತಿದ್ದು ಮತ್ತೋರ್ವ ಬೈಕ್ ಸವಾರ ವಿನೋದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ತಿರುವಿನಿಲ್ಲಿ ಅತಿ ವೇಗದಿಂದ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಯುವಕರು ಬೈಕ್ ನಲ್ಲಿ ತಮ್ಮ ಸ್ನೇಹಿತನ ಮದುವೆಗೆ ಎಂದು ಗೌರಿಬಿದನೂರು ಕಡೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *