ಸಿದ್ದರಾಮಯ್ಯನಿಗೆ ನಾಚಿಕೆಯಾಗ್ಬೇಕು – ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

Public TV
1 Min Read

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಉಡಾಫೆ ಮನುಷ್ಯ, ಪ್ರಧಾನಿ ಎಂದರೆ 120 ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮರೆತಿದ್ದಾರೆ. ಹೀಗಾಗಿ ಸಿದ್ದರಾಮಯ್ಯನಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಏಕವಚನ ಪದ ಪ್ರಯೋಗಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಅವನೊಬ್ಬ ಅನಾಗರಿಕ, ನಾಗರಿಕನೇ ಅಲ್ಲ ಇಂತಹ ಉಡಾಫೆಯ ಮಾತುಗಳಿಂದಲೇ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದಾನೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ 120 ರಿಂದ 40 ಸ್ಥಾನಕ್ಕೆ ಕುಸಿದಿದೆ. ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಪ್ರಧಾನಮಂತ್ರಿ ಬಗ್ಗೆ ಹೇಗೆ ಮಾತನಾಡಬೇಕು ಎಂಬುದೇ ಗೊತ್ತಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ದೋಸ್ತಿ ಅಷ್ಟಾಗಿ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾನಸಿಕ ಸ್ಥಿಮಿತ ಕಳೆದುಕೊಂಡ ಮೋದಿಗೆ ಚಿಕಿತ್ಸೆ ಬೇಕಿದೆ – ಸಿದ್ದರಾಮಯ್ಯ

ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಜಿ.ಟಿ.ದೇವೇಗೌಡರ ಹೇಳಿಕೆ ಕುರಿತು ಮಾತನಾಡಿದ ಮಾಜಿ ಸಚಿವರು, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೆ ದೋಸ್ತಿ ಸರಕಾರದಲ್ಲಿ ಸಮನ್ವಯತೆ ಇಲ್ಲ ಎಂಬುದು ಸಾಬೀತಾಗಿದೆ. ರಾಜ್ಯದಲ್ಲಿ ಈ ಬಾರಿ 20ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಲಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮತ ನನಗೆ ಬರುವ ನಿರೀಕ್ಷೆ ಇದೆ. ನಾನು ಇದುವರೆಗೆ ಎದುರಿಸಿರುವ ಚುನಾವಣೆಯಲ್ಲಿ ಇದು ಕಷ್ಟಕರ ಚುನಾವಣೆ ಆಗಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಜನರ ಬೆಂಬಲ ಸಿಕ್ಕಿದೆ. ಇದನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಮೋದಿ ಅಲೆ, ಯಡಿಯೂರಪ್ಪ ವರ್ಚಸ್ಸು ಹಾಗು ನನ್ನ ಅನುಭವ ಗೆಲುವಿಗೆ ಸಹಕಾರಿಯಾಗಲಿದೆ. ಗೆಲ್ಲುವ ವಿಶ್ವಾಸ ಇದೆ. ಗುಪ್ತ ಮತದಾನ ನಡೆದಿರುವುದರಿಂದ ಫಲಿತಾಂಶ ಏನು ಬೇಕಾದರೂ ಆಗಬಹುದು ಎಂದು ಅವರು ತಿಳಿಸಿದರು.

 

Share This Article
Leave a Comment

Leave a Reply

Your email address will not be published. Required fields are marked *