ಲಂಚ ಕೇಳಿದ್ದ ಆರೋಪ- ಮೂವರು NIA ಅಧಿಕಾರಿಗಳ ವರ್ಗಾವಣೆ

Public TV
1 Min Read

ನವದೆಹಲಿ: ಲಂಚ ಪಡೆಯಲು ಮುಂದಾದಗಿದ್ದ ಮೂವರು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ಎನ್‍ಐಎ ಸ್ಪಷ್ಟಪಡಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಹಫೀಜ್ ಸಯ್ಯದ್‍ನ ಉಗ್ರ ಸಂಘಟನೆ ಫಲಾಹ್-ಇ-ಇನ್ಸಾನಿಯತ್ ಫೌಂಡೇಶನ್(ಎಫ್‍ಐಎಫ್)ಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಮೂವರು ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ದೆಹಲಿ ಮೂಲದ ಉದ್ಯಮಿಯೊಬ್ಬರು ಈ ಸಂಘಟನೆಗೆ ಧನ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣದಿಂದ ನಿಮ್ಮ ಹೆಸರನ್ನು ಕೈ ಬಿಡಬೇಕಾದ್ರೆ 2 ಕೋಟಿ ರೂ. ಹಣ ನೀಡಬೇಕೆಂದು ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಎನ್‍ಐಎಗೆ ದೂರು ಸಲ್ಲಿಸಿದ್ದರು.

ಅಧಿಕಾರಿಗಳ ವಿರುದ್ಧ ಲಂಚದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೇರೊಂದು ವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿದೆ. ಓರ್ವ ಹಿರಿಯ ಅಧಿಕಾರಿಯನ್ನು ಎನ್‍ಐಎ ಮತ್ತೊಂದು ವಿಭಾಗಕ್ಕೆ ವರ್ಗಾಯಿಸಿದ್ದು, ಇಬ್ಬರು ಕಿರಿಯ ಅಧಿಕಾರಿಗಳು ಮಾತೃ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಎನ್‍ಐಎ ತಿಳಿಸಿದೆ.

26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ನಂತರ ಎನ್‍ಐಎ ಸ್ಥಾಪಿಸಲಾಗಿದೆ. ಭಯೋತ್ಪಾದನೆಯ ಪ್ರಕರಣಗಳನ್ನು ಇದು ಪ್ರತ್ಯೇಕವಾಗಿ ನಿರ್ವಹಿಸಲಿದೆ. ಇತ್ತೀಚೆಗೆ ಎನ್‍ಐಎಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗಿತ್ತು. ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಗೆ ತಿದ್ದುಪಡಿ ತಂದು ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಹೆಸರಿಸುವ ಸ್ವಾತಂತ್ರ್ಯವನ್ನು ಕಲ್ಪಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *