ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಬಸ್ ಡಿಕ್ಕಿ- ಸ್ಥಳದಲ್ಲಿಯೇ ಐವರ ದುರ್ಮರಣ

Public TV
1 Min Read

ಬೆಂಗಳೂರು: ರಸ್ತೆ ಸಾರಿಗೆ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕರ್ನಾಟಕಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸುಳಗಿರಿಯಲ್ಲಿ ನಡೆದಿದೆ.

ರಾಷ್ಟ್ರೀಯ 7 ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 4:30ರ ವೇಳೆ ಈ ಅಪಘಾತ ಸಂಭವಿಸಿದೆ. ತಮಿಳುನಾಡು ಬಸ್ ಮತ್ತು ಕಾರ್ ಎರಡು ಹೂಸೂರಿನಿಂದ ಕೃಷ್ಣಗಿರಿ ಕಡೆಗೆ ಹೋಗುತ್ತಿದ್ದವು. ಈ ಸಂದರ್ಭದಲ್ಲಿ ಕಾರು ಮುಂದೆ ಹೋಗುತ್ತಿತ್ತು, ಬಸ್ ಕಾರನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದು, ಬಸ್ಸಿನ ಟಯರ್ ಬ್ಲಾಸ್ಟ್ ಆಗಿದೆ. ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಹೋಗಿ ಕಾರಿಗೆ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್ ರಸ್ತೆ ಪಕ್ಕದ ಗುಂಡಿಗೆ ಉರುಳಿ ಬಿದ್ದಿದೆ. ಬಸ್‍ನಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸುಳಗಿರಿ ಹಾಗೂ ಹೊಸೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಸುಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *