ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರುದ್ಧ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

Public TV
1 Min Read

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡೆ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಸವಳಂಗ ರಸ್ತೆಯಲ್ಲಿರುವ ಸುನ್ನಿ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಂ ಬಾಂಧವರು ಪೌರತ್ವ ಕಾಯ್ದೆ ಜಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಕಾಯ್ದೆ ಜಾರಿಗೆ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಕಾಯ್ದೆ ಜಾರಿಗೊಳಿಸಿದರೆ ಭಾರತೀಯರು ಸಹ ಅತಂತ್ರರಾಗುತ್ತಾರೆ. ಈ ಕಾಯ್ದೆಯಿಂದ ಮುಸ್ಲಿಮರಲ್ಲಿ ಆತಂಕ ಎದುರಾಗಿದೆ. ಹೀಗಾಗಿ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ಜಾರಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ನೂತನ ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಗಿರೀಶ್ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಇಂದು ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *