ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

Public TV
1 Min Read

ಬೆಂಗಳೂರು: ಖಾಸಗಿ ಬಸ್ ಹಾಗು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತ ಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ರಸ್ತೆಯ ಕರ್ಪೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತನನ್ನು ಚಾನ್ ಪಾಷ ಹಾಗೂ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಅಬಿದ್ ಹುಸೇನ್ ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಮೂಲತಃ ಮಾಲೂರು ಮೂಲದವರಾಗಿದ್ದಾರೆ. ಇಬ್ಬರೂ ತರಕಾರಿ ವ್ಯಾಪಾರಿಗಳಾಗಿದ್ದು, ಇಂದು ಮಧ್ಯಾಹ್ನ ತರಕಾರಿ ವ್ಯಾಪಾರಕ್ಕೆಂದು ಆನೇಕಲ್ ಬಳಿಯ ತೋಟಕ್ಕೆ ಬರುವಾಗ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಎದುರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಯಾಂಟ್ರೋ ಕಾರು ಸಂಪೂರ್ಣ ನಜ್ಜುಗುಜ್ಜಗಿದ್ದು ಕಾರಿನಲ್ಲಿದ್ದವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ.

ಮೃತ ದೇಹವನ್ನು ಆನೇಕಲ್‍ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಕುರಿತು ಆನೇಕಲ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *