ಬೆಂಗಳೂರು: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ (Bhaskar Rao) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ (Alok Kumar) ವಿರುದ್ಧದ ಇಲಾಖಾ ತನಿಖೆ ಆದೇಶವನ್ನ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ.
ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ಭಾರೀ ಹಿನ್ನೆಡೆಯಾಗಿದೆ. 2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಿದ್ದಾಗ ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದರು. ಈ ವೇಳೆ ಎಡಿಜಿಪಿ ಭಾಸ್ಕರ್ ರಾವ್ ಫೋನ್ ಟ್ಯಾಪಿಂಗ್ ಮಾಡಿದ್ದ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ 2024 ರಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ
ಕಳೆದ ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣವನ್ನ ಇಲಾಖಾ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ತೀರ್ಪು ಬಂದ ಹಿನ್ನೆಲೆ, ಸಿಎಟಿ ಚೇರ್ಮನ್ ನ್ಯಾಯಮೂರ್ತಿ ರಣಜೀತ್ರಿಗೆ ಕೇಸ್ ವರ್ಗಾವಣೆಯಾಗಿತ್ತು. ಡಿಜಿಪಿ ಹುದ್ದೆಗೆ ಬಡ್ತಿ ತಡೆಯಲು ಅಲೋಕ್ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ ಅಂತಾ ಅಲೋಕ್ ಕುಮಾರ್ ಪರ ವಕೀಲರು ವಾದ ಮಂಡಿಸಿದ್ದರು.
ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಗೆಯೇ, ಅಲೋಕ್ ಕುಮಾರ್ಗೆ ಸಲ್ಲಬೇಕಾದ ಬಡ್ತಿ ಸವಲತ್ತುಗಳನ್ನ ನೀಡುವಂತೆ ಸಹ ಆದೇಶಿಸಿದ್ದಾರೆ. ಇದನ್ನೂ ಓದಿ: GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ