ಸುಳ್ವಾಡಿ ದುರಂತದಿಂದ ಎಚ್ಚೆತ್ತುಕೊಳ್ಳುತ್ತಿರುವ ದೇವಾಲಯಗಳು – ಪ್ರಸಾದ ತಯಾರಿಕಾ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ

Public TV
1 Min Read

ಮೈಸೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ಕ್ರಿಮಿನಾಶಕ ಪ್ರಕರಣದಿಂದ ಎಚ್ಚೆತ್ತುಕೊಂಡ ಜಿಲ್ಲೆಯ ಇತರೆ ದೇವಾಲಯಗಳು ಪ್ರಸಾದ ತಯಾರಿಸುವ ಸ್ಥಳದಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ.

ದೇವರಾಜ ಮೊಹಲ್ಲಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಡುಗೆ ತಯಾರಿಕಾ ಸ್ಥಳದಲ್ಲಿ 3 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಗುರುವಾರದಿಂದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ನಡೆಯುತ್ತಿದೆ. ಆದರಿಂದ ಭಕ್ತರಿಗಾಗಿ ದೇವಾಲಯದಲ್ಲಿಯೇ ಪ್ರಸಾದವನ್ನು ತಯಾರಿಸಲಾಗುತ್ತಿದೆ.

ದೇವಾಲಯದ ಅಧಿಕಾರಿಗಳು ಪ್ರಸಾದ ತಯಾರಿಕೆ ಮಾಡುತ್ತಿರುವ ಒಳಾವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲಾಗಿದ್ದು, ಯಾವುದೇ ತಪ್ಪು ನಡೆಯದಂತೆ ನಿಗಾವಹಿಸುತ್ತಿದ್ದಾರೆ.

ಆದೇಶದಲ್ಲಿ ಏನಿದೆ?
ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ನೀಡಿದ್ದ ವಿಷ ಪ್ರಸಾದ ಸೇವಿಸಿ 14 ಮಂದಿ ಸಾವನ್ನಪ್ಪಿದ ಬಳಿಕ ಎಚ್ಚೆತ್ತಿರುವ ರಾಜ್ಯ ಮುಜರಾಯಿ ಇಲಾಖೆ, ದೇವಾಲಯಗಳಲ್ಲಿ ಅನ್ನದಾಸೋಹ, ಪ್ರಸಾದ ವಿತರಣೆಗೆ ಸ್ಥಳೀಯ ಅಧಿಕಾರಿಗಳ ಅನುಮತಿ ಕಡ್ಡಾಯ ಎಂಬ ಖಡಕ್ ಆದೇಶವನ್ನು ಹೊರಡಿಸಿತ್ತು.

ದೇವರ ನೈವೇದ್ಯ ಮತ್ತು ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿ ಟಿವಿ ಅಳವಡಿಕೆಯೂ ಕೂಡ ಕಡ್ಡಾಯ. ಪ್ರಮುಖವಾಗಿ ದೇವಾಲಯದ ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಮೇಲೆ ಕಟ್ಟುನಿಟ್ಟಿನ ನಿಗಾವಹಿಸುವುದು.

ತಯಾರಿಸಿದ ನೈವೇದ್ಯ/ ಅಡುಗೆಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಬೇಕು. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದವನ್ನು ಆರೋಗ್ಯಾಧಿಕರಿಗಳು ಪರಿಶೀಲನೆ ನಡೆಸಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ನೀಡುವ ಪ್ರಸಾದಕ್ಕೆ ಆರೋಗ್ಯಾಧಿಕಾರಿಯಿಂದ ಅನುಮತಿ ಪಡೆದ ಮೇಲೆಯೇ ವಿತರಣೆ ಮಾಡಬೇಕು.

ದೇವಾಲಯದ ಪರಿಸರದಲ್ಲಿ ಭಕ್ತಾದಿಗಳೇ ಪ್ರಸಾದ ತಯಾರಿಸಿ ನೇರವಾಗಿ ಭಕ್ತರಿಗೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆ ಒಳಪಡಿಸಿ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಇಲಾಖೆ ನೀಡಿದ ನಿಯಮಗಳನ್ನು ಆಯಾ ದೇವಾಲಯ ಸಂಸ್ಥೆಗಳು ಪಾಲಿಸಬೇಕು ಎಂದು ತಿಳಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *