ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ: ಕೇಂದ್ರ ಕೃಷಿ ಸಚಿವ ಸ್ಪಷ್ಟನೆ

Public TV
1 Min Read

ಭೋಪಾಲ್: ಈಗಾಗಲೇ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಸ್ಪಷ್ಟಪಡಿಸಿದ್ದಾರೆ.

ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್‌, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ ಬಗ್ಗೆ ಮಾತನಾಡುವಾಗ, ಕೇಂದ್ರ ಸರ್ಕಾರ ದೂರದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ಕಾರಣಾಂತರಗಳಿಂದ ಅವುಗಳನ್ನು ಹಿಂಪಡೆದಿದೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸದಾ ಕ್ರಿಯಾಶೀಲವಾಗಿರುತ್ತದೆ ಎಂದು ತೋಮರ್‌ ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ಒಳ್ಳೆಯ ಕೃಷಿ ಕಾಯ್ದೆಗಳನ್ನು ತರಲಾಗಿತ್ತು. ಆದರೂ ಅವುಗಳಿಗೆ ವಿರೋಧ ವ್ಯಕ್ತವಾಯಿತು. ಇದರಿಂದ ಸರ್ಕಾರ ಬೇಸರಗೊಂಡಿಲ್ಲ. ಸರ್ಕಾರ ಒಂದು ಹೆಜ್ಜೆ ಹಿಂದೆ ಇರಿಸಿದೆ. ಆದರೆ ಖಂಡಿತ ಸುಧಾರಣೆಯತ್ತ ಸಾಗಲಿದೆ. ರೈತರು ಈ ದೇಶದ ಬೆನ್ನೆಲುಬು. ಈ ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸಮರ್ಥವಾಗಿ ಮುನ್ನಡೆಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

ಕೇಂದ್ರ ಸರ್ಕಾರವು ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಷಡ್ಯಂತ್ರ ರೂಪಿಸಿದೆ. ಸದ್ಯದಲ್ಲೇ ಐದು ರಾಜ್ಯಗಳಿಗೆ ನಡೆಯುವ ವಿಧಾನಸಭಾ ಚುನಾವಣೆ ನಂತರ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮಾತನಾಡಿದ್ದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸತತ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಪ್ರಬಲ ವಿರೋಧವನ್ನು ಅರಿತು ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *