ಸರಗಳ್ಳತನ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್ – ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

Public TV
1 Min Read

ವಿಜಯಪುರ: ನಗರದಲ್ಲಿ ಹೆಚ್ಚುತ್ತಿದ್ದ ಸರಗಳ್ಳತನ ಪ್ರಕರಣಗಳನ್ನು ಬೇಧಿಸಿ ಐದು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಸುಮಾರು 13 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಎಸ್‍ಪಿ ಪ್ರಕಾಶ ನಿಕ್ಕಂ, ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಜಯಪುರ ನಗರದ ತೌಸೀಫ್ ಖಾಜಾಸಾಬ ಬಾಗವಾನ, ಅಜಮಾನ ತಂ ಹಾಗೂ ಇಮ್ತಿಯಾಜ್ ಖುರೇಷಿಯನ್ನು ಬಂಧಿಸಲಾಗಿದ್ದು, ಆರೋಪಿಗಳ ಬಳಿ 99 ಗ್ರಾಮ ಬಂಗಾರ, ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಸೇರಿ ಒಟ್ಟು 3 ಲಕ್ಷ 46 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ನಗರದಲ್ಲಿ ಸರಗಳ್ಳತನ ಮಾಡ್ತಿದ್ದ ಮತ್ತೊಂದು ತಂಡವೊಂದನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಮಹಮ್ಮದ್ ಖಾಲಿದ್ ಇನಾಮದಾರ, ಅಮೀತ್ ಜಂಬಗಿ, ಮಹ್ಮದ್ ಆರೀಫ್ ಶೇಖ್, ಅಮೀರ ಯರನಾಳ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 309 ಗ್ರಾಂ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ 4 ಬೈಕ್ ಸೇರಿ ಒಟ್ಟು 10 ಲಕ್ಷದ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಒಟ್ಟು 10 ಪ್ರಕರಣಗಳಲ್ಲಿ ಈ ಎರಡು ಖರ್ತನಾಕ್ ಗ್ಯಾಂಗ್ ಭಾಗಿಯಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿಗಳ ವಿರುದ್ಧ ವಿಜಯಪುರ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಗಳಿಗೆ ಎಸ್‍ಪಿ ಪ್ರಕಾಶ್ ಬಹುಮಾನ ವಿತರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *