ಮಾರಮ್ಮ ದೇವಿ ಪ್ರಸಾದ ಸೇವಿಸಿ ಐವರ ಸಾವು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Public TV
1 Min Read

ಚಾಮರಾಜನಗರ: ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ 5 ಜನ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಗೋಪಿಯಮ್ಮ(35), ಶಾಂತ (20) ಹಾಗೂ ಪಾಪಣ್ಣ (50) ಮೃತ ದುರ್ದೈವಿಗಳು. ಅಸ್ವಸ್ಥಗೊಂಡವರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯ ವಿವರ:
ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಗೋಪುರದ ಶಂಕುಸ್ಥಾಪನೆ ಇಂದು ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಆಂಬುಲೆನ್ಸ್ ನಲ್ಲಿ ಅಸ್ವಸ್ಥಗೊಂಡ ಜನರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೇವಸ್ಥಾನದ ಅರ್ಚಕ, ಪುಟ್ಟ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಐವರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಹನೂರು ಶಾಸಕ ನಾಗೇಂದ್ರ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಘಟನಾ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಹೆಚ್ಚಾಗಿ ದೇವಸ್ಥಾನ ಸುತ್ತಮುತ್ತಲಿನ ಗ್ರಾಮಸ್ಥರು ಅಲ್ಲಿ ಸೇರಿದ್ದರು. ರೈಸ್‍ಬಾತ್ ಅನ್ನು ಲ್ಯಾಬ್‍ಗೆ ಕಳುಹಿಸಿ ಪರೀಕ್ಷೆ ಮಾಡುವಂತೆ ತಿಳಿಸಿದ್ದೇನೆ ಎಂದರು.

https://www.youtube.com/watch?v=zFnWjIpKhQc

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *