ಚಂದಿರನ ಅಂಗಳಕ್ಕೆ ಜಿಗಿದ ‘ಬಾಹುಬಲಿ’ – ಜಿಎಸ್‍ಎಲ್‍ವಿ ಮಾರ್ಕ್-3 ಉಡಾವಣೆ ಯಶಸ್ವಿ

Public TV
2 Min Read

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಚಂದ್ರಯಾನ 2 ಅಧಿಕೃತವಾಗಿ ಆರಂಭವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ ಇಂದು ಮಧ್ಯಾಹ್ನ 2.41ಕ್ಕೆ ನಭಕ್ಕೆ ಚಿಮ್ಮಿದೆ.

ಈ ಮೂಲಕ ಈ ಸಾಧನೆ ಮಾಡುತ್ತಿರುವ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇಲ್ಲಿಯವರೆಗೆ ಅಮೆರಿಕ, ರಷ್ಯಾ, ಚೀನಾ ಮಾತ್ರ ಈ ಪ್ರಯೋಗದಲ್ಲಿ ಯಶಸ್ವಿಯಾಗಿವೆ. ಈ ಸಾಲಿಗೆ ಈಗ ಭಾರತ ಸೇರಲಿದೆ. ಪ್ರತಿಯೊಂದು ಹಂತಗಳು ಯಶಸ್ವಿಯಾಗುತ್ತಿದ್ದಂತೆ ವಿಜ್ಞಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸುತ್ತಿದ್ದರು.

ಚಂದ್ರಯಾನ 2 ಯೋಜನೆಗೆ ಸುಮಾರು 978 ಕೋಟಿ ವೆಚ್ಚವಾಗಿದೆ. ಇದರಲ್ಲಿ ಉಪಗ್ರಹ ನಿರ್ಮಾಣಕ್ಕೆ 603 ಕೋಟಿ ರೂ. ವೆಚ್ಚವಾಗಿದ್ದರೆ, ರಾಕೆಟ್‍ಗೆ 375 ಕೋಟಿ ರೂ. ಖರ್ಚಾಗಿದೆ. ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವವೇ ಆಯ್ಕೆ ಏಕೆ? ಯಾವ ಸಾಧನದ ಕೆಲಸ ಏನು?- ಇಲ್ಲಿದೆ ಚಂದ್ರಯಾನ 2 ಪೂರ್ಣ ಮಾಹಿತಿ

ಚಂದ್ರಯಾನ 2 ಉಪಗ್ರಹದ ಒಟ್ಟು ತೂಕ 3,850 ಕೆಜಿ. ಇದ್ದು 3 ಲಕ್ಷದ 82 ಸಾವಿರ ಕಿ.ಮೀ. ಸಾಗಲಿದೆ. 54 ದಿನಗಳ ಬಳಿಕ ಅಂದರೆ ಸೆಪ್ಟೆಂಬರ್ 13 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಲಿದೆ.

ಚಂದ್ರನ ಆಯ್ಕೆ ಏಕೆ?
ಚಂದ್ರ ನಮಗೆ ಅತಿ ಹತ್ತಿರದ ಆಕಾಶಕಾಯವಾಗಿದ್ದು ಸಂಶೋಧನೆ ಮತ್ತು ದಾಖಲೀಕರಣ ಸುಲಭ. ಬಾಹ್ಯಾಕಾಶ ತಂತ್ರಜ್ಞಾನ ಪರೀಕ್ಷೆಯ ಭರವಸೆಯ ಪ್ರಯೋಗಾಲಯ. ಹಲವು ಪ್ರಯೋಗಗಳಿಗೆ ಚಂದ್ರಯಾನ ವೇದಿಕೆಯಾಗಲಿದೆ.

ಚಂದ್ರಯಾನ 2 ಯೋಜನೆ ಏಕೆ?
ಚಂದ್ರನ ಬಗ್ಗೆ ಸಾಧ್ಯವಾದಷ್ಟು ತಿಳಿದುಕೊಳ್ಳಲು ಎಲ್ಲ ದೇಶಗಳೂ ಪ್ರಯತ್ನಿಸುತ್ತಿವೆ. ಬೇರಾವ ದೇಶಗಳೂ ಸಮೀಪಿಸದ `ಚಂದ್ರನ ದಕ್ಷಿಣ ಧ್ರುವ ಪ್ರದೇಶ’ವನ್ನು ತಲುಪಲಾಗುತ್ತಿದೆ. ಈ ಸಂಶೋಧನೆಗಳು ಭಾರತ ಹಾಗೆಯೇ ಮನುಕುಲಕ್ಕೆ ನೆರವಾಗಲಿವೆ. ಇದು ಇನ್ನಷ್ಟು ಯಾನಗಳಿಗೆ ಪ್ರೇರಣೆಯೂ ಆಗಬಲ್ಲದು

ಚಂದ್ರಯಾನ 2ಗೆ ಮಾನಿನಿಯರ ಮುಂದಾಳತ್ವ:
ಯೋಜನಾ ತಂಡದಲ್ಲಿ ಶೇ.30ರಷ್ಟು ಮಹಿಳೆಯರು ಕಾರ್ಯನಿರ್ವಹಿಸಿದ್ದು, ಇಬ್ಬರು ಮಹಿಳೆಯರು ನೇತೃತ್ವ ವಹಿಸಿಕೊಂಡಿದ್ದಾರೆ. ಯೋಜನಾ ನಿರ್ದೇಶಕಿ ಎಂ. ವನಿತಾ, ಅಭಿಯಾನ ನಿರ್ದೇಶಕಿ ರಿತು ಕರಿಧಾಲ್ ಅವರಿಗೆ ಇಸ್ರೋದಲ್ಲಿ 20 ವರ್ಷ ಸೇವೆಗಳ ಅನುಭವವಿದೆ. ಮಂಗಳಯಾನ ಸೇರಿ ಪ್ರಮುಖ ಯೋಜನೆಗಳಲ್ಲಿ ಇಬ್ಬರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಚಂದ್ರಯಾನ-2 ಗೆ 620 ಸರ್ಕಾರಿ, ಖಾಸಗಿ ಕಂಪನಿಗಳು, ಐಐಎಸ್ಸಿ, ಐಐಟಿ ಸೇರಿದಂತೆ ದೇಶದ ಪ್ರಮುಖ 15 ಶಿಕ್ಷಣಗಳ ಕೇಂದ್ರಗಳು ನಾನಾ ರೀತಿಯಲ್ಲಿ ಕೆಲಸ ಮಾಡಿವೆ.

Share This Article
Leave a Comment

Leave a Reply

Your email address will not be published. Required fields are marked *