ಬೆಂಗಳೂರು ಬಾಂಬ್‌ ಸ್ಫೋಟ – ಶಂಕಿತನ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ಸಿಎಂ

Public TV
2 Min Read

 – ಟೋಕನ್ ಪಡೆದು ತಿಂಡಿ ತಿಂದ ವ್ಯಕ್ತಿ ಬ್ಯಾಗ್ ಇಟ್ಟು ಬಂದಿದ್ದಾನೆ – ಸಿದ್ದರಾಮಯ್ಯ

ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ (Rameshwaram Cafe Blast) ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸೋಷಿಯಲ್‌ ಮೀಡಿಯಾ X ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ.

ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ.

ರಾಜ್ಯದಲ್ಲಿ ಇಂಥ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನಃ ಅಂತಹ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರೋಧ ಪಕ್ಷಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಈಗ ಸರ್ಕಾರದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಡಿಜಿಪಿ ಅಲೋಕ್‌ ಮೋಹನ್‌ ಹೇಳಿದ್ದೇನು?
ವೈಟ್‌ಫೀಲ್ಡ್‌ ಬಳಿಯ ಬ್ರೂಕ್‌ಫೀಲ್ಡ್‌ ಕುಂದಲನಹಳ್ಳಿ ಮುಖ್ಯರಸ್ತೆಯಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೆಲ ಅನುಮಾನಾಸ್ಪದ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಬಾಂಬ್ ಸ್ಫೋಟಗೊಂಡಿದೆ. ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್‌ ಅವರು ಮಾಹಿತಿ ಪಡೆದಿದ್ದಾರೆ. ಎಫ್‌ಎಸ್‌ಎಲ್‌ ತಂಡದ ಪರಿಶೀಲನೆ ಬಳಿಕಪೂರ್ಣ ಮಾಹಿತಿ ನೀಡುತ್ತೇವೆ ಎಂದು ಡಿಜಿಪಿ ಅಲೋಕ್‌ ಮೋಹನ್‌ ಹೇಳಿದ್ದಾರೆ.

ರಾಮೇಶ್ವರ ಕೆಫೆ ಎಂ.ಡಿ. ಸ್ಫೋಟಕ ಮಾಹಿತಿ:
ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ರಾಮೇಶ್ವರ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಹೇಳಿದ್ದಾರೆ.

Share This Article