ಎತ್ತಿನಗಾಡಿಯಲ್ಲಿ ಬಂದ ನೂತನ ಸಚಿವ ಸುಧಾಕರ್

Public TV
2 Min Read

– ಜಿಲ್ಲಾ ಉಸ್ತುವಾರಿ ಸಚಿವರು ಶೀಘ್ರದಲ್ಲೇ ನೇಮಕ

ಚಿಕ್ಕಬಳ್ಳಾಪುರ: ಇತ್ತೀಚೆಗೆ ತಾನೇ ಖಾತೆ ಹಂಚಿಕೆಯಾಗಿದ್ದು, ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಆಗಲಿದೆ ಅಂತ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ ಕೆ.ಸುಧಾಕರ್ ಹೇಳಿದರು.

ಕೃಷಿಮೇಳ 2020 ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಸುಧಾಕರ್, ಬಜೆಟ್ ಮಂಡನೆಗಾಗಿ ವಿಧಾನಸಭೆ ಅಧಿವೇಶನ ಇರುವ ಕಾರಣ ರಾಜ್ಯಪಾಲರ ಭಾಷಣ ಇರುತ್ತದೆ. ಹೀಗಾಗಿ ಮುಖ್ಯಮಂತ್ರಿಗಳು ಆ ಕಾರ್ಯದಲ್ಲಿ ಸ್ವಲ್ಪ ಬ್ಯುಸಿ ಇರಬಹುದು. ಹೀಗಾಗಿ ಅದಷ್ಟು ಶೀಘ್ರದಲ್ಲೇ ನೂತನ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಸ್ವಂತ ಜಿಲ್ಲೆ ಚಿಕ್ಕಬಳ್ಳಾಪುರ ಆಗಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಭೌಗೋಳಿಕವಾಗಿ ಹಾಗೂ ಜಿಲ್ಲೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಸ್ಪಷ್ಟ ಅರಿವು ಕಾರಣ ತಮಗೆ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡಿದರೇ ಒಳ್ಳೆಯದಾಗುತ್ತದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಹಕಾರಿಯಾಗಲಿದೆ ಅಂತ ಜಿಲ್ಲೆಯ ಉಸ್ತುವಾರಿ ಮಂತ್ರಿ ಸ್ಥಾನದ ಇಂಗಿತ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ವೇದಿಕೆ ಭಾಷಣದಲ್ಲಿ ಮಾತನಾಡುವ ವೇಳೆ ತಾವೇ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿದ್ದು, ಮುಂದಿನ ದಿನಗಳಲ್ಲಿ ಯಾವುದೇ ತಾರತಮ್ಯ ಮಾಡದೇ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಸಮಾನ ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಕೃಷಿಮೇಳ 2020 ರ ಸಿರಿಧಾನ್ಯಮೇಳ ಹಾಗೂ ಫಲಪುಷ್ಪಪ್ರದರ್ಶನಕ್ಕೆ ಎತ್ತಿನಗಾಡಿಯಲ್ಲಿ ಬರುವ ಮೂಲಕ ಗಮನ ಸೆಳೆದರು. ನಗರದ ಸರ್ ಎಂ ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳಕ್ಕೆ ಬಿಬಿ ರಸ್ತೆಯಿಂದ ಸರಿ ಸುಮಾರು ಅರ್ಧ ಕಿಲೋಮೀಟರ್ ದೂರದ ಕ್ರೀಡಾಂಗಣಕ್ಕೆ ಎತ್ತಿನಬಂಡಿಯಲ್ಲೇ ಬಂದ ಸಚಿವರು ಆಕರ್ಷಣೀಯ ಕೇಂದ್ರವಾಗಿದ್ದರು.

ಕ್ರೀಡಾಂಗಣದಲ್ಲಿ ನಿರ್ಮಿಸಿಲಾಗಿದ್ದ ನರೇಗಾ ಕಾಮಗಾರಿಗಳ ಪ್ರಾತಕ್ಷಿತೆ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಟೇಪ್ ಕಟ್ ಮಾಡಿ ಚಾಲನೆ ನೀಡಿದ ಸಚಿವರು, ಗುಲಾಬಿ ಹೂಗಳಿಂದ ಅರಳಿ ನಿಂತಿದ್ದ ಹಂಪಿ ಕಲ್ಲಿನ ರಥದ ಎದುರು ಫೋಟೋ ತೆಗೆಸಿಕೊಂಡು ಗುಲಾಬಿ ಹೂಗಳ ಹಂಪಿಯ ಕಲ್ಲಿನ ರಥಧಾಕೃತಿಗೆ ಸಂತಸ ವ್ಯಕ್ತಪಡಿಸಿದರು. ತದನಂತರ ರೈತರ ಉಪಯೋಗಕ್ಕೆ ಬರುವ ವಿವಿಧ ಅಂಗಡಿ ಮಳಿಗೆಗಳನ್ನು ಕೃಷಿ ಮೇಳದಲ್ಲಿ ಆರಂಭಿಸಲಾಗಿದ್ದು, ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸದ ಬಚ್ಚೇಗೌಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ನರಸಿಂಹಯ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿ ಸೇರಿದಂತೆ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿ ಸಿರಿಧಾನ್ಯಗಳಿಗೆ ಮಾರುಕಟ್ಟೆ ವೃದ್ಧಿಯಾಗಿದ್ದು, ಅತಿ ಕಡಿಮೆ ನೀರಿನಲ್ಲೂ ಅಂದರೆ ಮಳೆಗಾಲದಲ್ಲೂ ಸಹ ಬೆಳೆಯಬಹುದಾದ ಸಿರಿಧಾನ್ಯಗಳನ್ನ ಉತ್ಪಾದನೆಗೆ ರೈತರು ಮುಂದಾಗಬೇಕು, ರಸಗೊಬ್ಬರಗಳ ಬಳಕೆಯನ್ನ ಕಡಿಮೆ ಮಾಡಿ ಸಾವಯುವ ಪದ್ದತಿಯಲ್ಲಿ ಬೇಸಾಯ ಮಾಡುವತ್ತ ಮರಳಿ ರೈತರು ಬರಬೇಕಿದೆ ಅಂತ ಮನವಿ ಮಾಡಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *