ಸ್ಕೂಟಿಗೆ ಬೈಕ್ ಡಿಕ್ಕಿ – ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿ ಬಿದ್ದ ಸವಾರ

Public TV
1 Min Read

ಚಿಕ್ಕಮಗಳೂರು: ಸ್ಕೂಟಿಲ್ಲಿ ಹೋಗುತ್ತಿದ್ದ ಇಬ್ಬರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಗ್ಗಿನಗದ್ದೆ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಬರುತ್ತಿದ್ದ ಬೈಕ್ ಸವಾರ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದಾನೆ.

ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆಯ ಪಕ್ಕದಲ್ಲೇ ಕಲ್ಲಿನ ಕಟ್ಟೆಯಿದ್ದು, ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಕೂಟಿ ಸವಾರ ಹಾಗೂ ಸ್ಕೂಟಿಯ ಹಿಂಭಾಗ ಕುಳಿತಿದ್ದ ವ್ಯಕ್ತಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಮೂವರು ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಹಿಂಬದಿಯಿಂದ ಬಂದ ಬೈಕ್ ಸವಾರನ ಅಜಾಗರೂಕತೆ ಎದ್ದು ಕಾಣುತ್ತಿದ್ದು, ಆತನ ಬೇಜವಾಬ್ದಾರಿಯಿಂದಲೇ ಈ ಅಪಘಾತ ಸಂಭವಿಸಿದೆ.

Share This Article
Leave a Comment

Leave a Reply

Your email address will not be published. Required fields are marked *