ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಮನವಿ – ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಅವರಿಗೆ ಮನವಿ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಪಕ್ಷದ ಚಿಹ್ನೆಯಿಂದ ಗೆದ್ದ ಜನಪ್ರತಿನಿಧಿ ಸ್ವಇಚ್ಛೆಯಿಂದ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ರಾಜೀನಾಮೆ ನೀಡಿರುವ ಎಲ್ಲ ಶಾಸಕರು ಬಿಜೆಪಿಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಹೀಗಾಗಿ ಸ್ವೀಕರ್ ಅವರಿಗೆ ಶಾಸಕರನ್ನು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಬೇಕೆಂದು ಮನವಿ ಸಲ್ಲಿಸುತ್ತೇವೆ. ಈ ಸುದ್ದಿಗೋಷ್ಠಿ ಮೂಲಕ ಎಲ್ಲ ಶಾಸಕರಿಗೆ ಕೊನೆಯ ಸಂದೇಶವನ್ನು ರವಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಖಡಕ್ ಆಗಿ ಹೇಳಿದರು.

ಬಿಜೆಪಿಯ ಚಕ್ರವ್ಯೂಹದಲ್ಲಿ ನಮ್ಮ ಕೆಲ ಶಾಸಕರು ಸಿಲುಕಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರ ಹೊರತಾಗಿ ಎಲ್ಲರೂ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿದ್ದರು. ಅತೃಪ್ತರೆಲ್ಲರೂ ರಾಜೀನಾಮೆ ಹಿಂಪಡೆದು ವಾಪಸ್ ಬನ್ನಿ ಎಂದು ಹೇಳುತ್ತಿದ್ದೇನೆ. ಬಿಜೆಪಿ ಅಪರೇಷನ್ ಕಮಲದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಒಂದು ಗಂಟೆ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಮೈತ್ರಿಯನ್ನು ಮುರಿಯಲು ಪ್ರಯತ್ನಿಸುತ್ತಿದೆ. ಇದು ಆರನೇ ಬಾರಿ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯಲು ಮುಂದಾಗಿದೆ. ಈ ಎಲ್ಲದರ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಸ್ತಕ್ಷೇಪವಿದೆ ಎಂದು ಆರೋಪಿಸಿದರು.

ಶಾಸಕರನ್ನು ಖರೀದಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ಈ ಸಂಬಂಧ ನಮ್ಮ ಶಾಸಕರು ಸೇರಿದಂತೆ ಎಲ್ಲರೂ ಗಾಂಧಿ ಪ್ರತಿಮೆ ಬಳಿ ಬಿಜೆಪಿ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *